ಬೆಂಗಳೂರು, ಜುಲೈ 18: ಬೆಂಗಳೂರು ಉತ್ತರ ನಗರ ಪಾಲಿಕೆ (ಬಿಎನ್ಸಿಸಿ) ಆಯುಕ್ತ ಪೊಮ್ಮಲ ಸನೀಲ್ ಕುಮಾರ್ ಅವರ ನಿರ್ದೇಶನದಂತೆ ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಉದ್ದೇಶದಿಂದ ಶನಿವಾರ ವ್ಯಾಪಕ ಸೊಳ್ಳೆ ಉತ್ಪತ್ತಿ ಮೂಲ ನಿರ್ಮೂಲನಾ ಕಾರ್ಯಾಚರಣೆ ನಡೆಸಿತು.
ಕಾರ್ಯಾಚರಣೆಯ ವೇಳೆ ವಸತಿ ಪ್ರದೇಶಗಳು, ಉದ್ಯಾನವನಗಳು, ನರ್ಸರಿಗಳು, ನಿರ್ಮಾಣ ಹಂತದ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ನಿಂತ ನೀರಿನ ತಾಣಗಳನ್ನು ಗುರುತಿಸಿ ತೆರವುಗೊಳಿಸಲಾಯಿತು.
ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರಲ್ಲಿ ಡೆಂಗ್ಯೂ ತಡೆ ಕುರಿತು ಜಾಗೃತಿ ಮೂಡಿಸಿದರು. ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮತ್ತು ನೀರು ನಿಲ್ಲದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸಲಹೆ ನೀಡಿದರು.
ನೀರು ಸಂಗ್ರಹಿಸುವ ಪಾತ್ರೆಗಳನ್ನು ನಿಯಮಿತವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸುವುದು, ಹಳೆಯ ಟೈರುಗಳು, ತೆಂಗಿನ ಚಿಪ್ಪುಗಳು ಹಾಗೂ ಮಳೆನೀರು ನಿಲ್ಲಬಹುದಾದ ವಸ್ತುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವುದು, ಮೇಲ್ದರ್ಜೆ ನೀರಿನ ಟ್ಯಾಂಕ್ಗಳು ಹಾಗೂ ನೀರಿನ ಸಂಗ್ರಹ ಪಾತ್ರೆಗಳನ್ನು ಮುಚ್ಚಿಡುವುದು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುವ ಪರಿಶೀಲನೆ ಹಾಗೂ ಜಾಗೃತಿ ಕಾರ್ಯಕ್ರಮಗಳಿಗೆ ಸಹಕರಿಸುವಂತೆ ಪಾಲಿಕೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ನಿರಂತರ ನಿಗಾವಹಿಕೆ, ಸೊಳ್ಳೆ ಉತ್ಪತ್ತಿ ಮೂಲಗಳ ನಿರ್ಮೂಲನೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಬಿಎನ್ಸಿಸಿ ಬದ್ಧವಾಗಿದೆ ಎಂದು ತಿಳಿಸಿದೆ.