Cauvery water to Tamil Nadu: ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ:
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ಒಪ್ಪಿಗೆ ನೀಡಿದೆ. ಇಂದೇ ಈ ಪೀಠ ರಚನೆಯಾಗಲಿದ್ದು, ವಿಚಾರಣೆ ಕೂಡ ಇಂದೇ ಆರಂಭವಾಗಲಿದೆ ಎಂದು ಹೇಳಲಾಗಿದೆ.
ಸುಪ್ರೀಂಕೋರ್ಟ್ನಲ್ಲಿ ಸಿಜೆಐ ಪೀಠದ ಮುಂದೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ 2023 ಆಗಸ್ಟ್ 14ರಿಂದ ಅನ್ವಯವಾಗುವಂತೆ ಕರ್ನಾಟಕದ ಜಲಾಶಯದಿಂದ 24,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಅದಕ್ಕೆ ನಿರ್ದೇಶಿಸುವಂತೆ ಕೋರಿದ ಮನವಿಯನ್ನು ಸೋಮವಾರ ಆಲಿಕೆ ವೇಳೆ ಪ್ರಸ್ತಾವಿಸುವಂತೆ ತಮಿಳುನಾಡು ಸರಕಾರಕ್ಕೆ ಸೂಚಿಸಿತು.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಈ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಈ ಶುಕ್ರವಾರ ಪ್ರಸ್ತಾಪಿಸಿದರು.
ತಮಿಳುನಾಡು ವಾದ
ಕಾವೇರಿ ಜಲ ವಿವಾದದಲ್ಲಿ ಈ ಮನವಿಯನ್ನು ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ ರೋಹ್ಟಗಿ, ತಪ್ಪಲು ಜಿಲ್ಲೆಗಳಲ್ಲಿ ಬೆಳೆದು ನಿಂತ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯತೆ ಇದೆ ಎಂದು ರೋಹ್ಟಗಿ ತಮ್ಮ ವಾದದಲ್ಲಿ ಹೇಳಿದ್ದರು. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಬಿಲ್ಲಿಗುಂಡ್ಲುವಿನಲ್ಲಿ 2023 ಆಗಸ್ಟ್ 11ರಂದು ಮುಂದಿನ 15 ದಿನಗಳಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರಿನ ಪ್ರಮಾಣವನ್ನು 15 ಸಾವಿರ ಕ್ಯೂಸೆಕ್ಸ್ (ಪ್ರತಿದಿನ 0.864 ಟಿಎಂಸಿ)ನಿಂದ 10 ಸಾವಿರ ಕ್ಯೂಸೆಕ್ಸ್ ಗೆ ಇಳಿಕೆ ಮಾಡಿದೆ. ಆ ಮೂಲಕ ಅದು ಆದೇಶವನ್ನು ಉಲ್ಲಂಘಿಸಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಲಾಗಿದೆ.
