ಸ್ಮಾರ್ಟ್ ಸಿಟಿ ಯೋಜನೆಯ ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು:
ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹೊಸ ವರ್ಷದ ಮೊದಲನೆಯ ದಿನವಾದ ಇಂದು ನಗರದ ಹೊರವಲಯದಲ್ಲಿ ಆಯೋಜಿಸಲಾಗಿದ್ದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡುತ್ತಿದ್ದ ಅವರು ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಮತ್ತು ಯೋಜನೆಗಳ ಅನುಷ್ಠಾನದ ಕುರಿತಂತೆ ಇಂದು ಸಭೆ ನಡೆಸಿ ಚರ್ಚಿಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. pic.twitter.com/wKVKO3Mqud
— B.S. Yediyurappa (@BSYBJP) January 1, 2021
ಮುಂದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಿರುವ ಹಿನ್ನಲೆಯಲ್ಲಿ ಇಲಾಖವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ ಅವರು 2022 ರ ಒಳಗೆ ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ನಕ್ಷೆಯಲ್ಲಿ ಹಾಗೂ ಸಮೃದ್ಧಿಯ ಕಕ್ಷೆಯಲ್ಲಿ ಕೊಂಡುಯ್ಯೊಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ ಹಾಗೂ ಬೆಂಬಲವಾಗಿ ಟೊಂಕ ಕಟ್ಟಿ ನಿಲ್ಲುವುದಾಗಿ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮುಖ್ಯಮಂತ್ರಿಯವರಿಗೆ ಈ ಸಂದರ್ಭದಲ್ಲಿ ಭರವಸೆ ನೀಡಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಿದ್ದರು.