ನವದೆಹಲಿ/ಬೆಂಗಳೂರು:
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಏಪ್ರಿಲ್ 17ರಂದು ಉಪಚುನಾವಣೆ ನಿಗದಿಯಾಗಿದ್ದು, ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಇನ್ನೂ ಘೋಷಿಸಿಲ್ಲ.
ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ತೊರೆದು ಪಕ್ಷ ಸೇರಿದ್ದ ಬಸವನಗೌಡ ತುರವಿಹಾಳ ಅವರನ್ನು ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
![ಮೂರು ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ 1 IMG 20210319 WA0001](https://kannada.thebengalurulive.com/wp-content/uploads/2021/03/IMG-20210319-WA0001.jpg)
2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರತಾಪಗೌಡ ಪಾಟೀಲ ಅವರ ವಿರುದ್ಧ ಬಿಜೆಪಿಯಿಂದ ಸ್ಫರ್ಧಿಸಿದ್ದ ಬಸವನಗೌಡ ಕಡಿಮೆ ಮತಗಳ ಅಂತರದಿಂದ ಸೋಲನುಭವಿಸಿದ್ದರು.
ಸಿಂದಗಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಟಿಕೆಟ್ ನೀಡಲಾಗಿದೆ. ಈ ಮೂಲಕ ಮೂರು ಕ್ಷೇತ್ರಗಳಿಗೆ ಮುಂಚಿತವಾಗಿಯೇ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಆದೇಶ ಹೊರಡಿಸಿದ್ದಾರೆ.