Home ಬೆಳಗಾವಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಭವಿಷ್ಯವಿಲ್ಲ: ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಭವಿಷ್ಯವಿಲ್ಲ: ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ

19454
0
Congress is a sinking ship, it has no future: Former CM BS Yeddiyurappa
Congress is a sinking ship, it has no future: Former CM BS Yeddiyurappa

ಬೆಳಗಾವಿ:

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷ ಭವಿಷ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಧರ್ಮನಾಥ ಭವನದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಮತ್ತು ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ್ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ನಡೆದ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 4 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ. ಜಾಗತಿಕ ನಾಯಕರಾಗಿರುವ ಪ್ರಧಾನಿ ಮೋದಿಯವರನ್ನು ರಾಹುಲ್ ಗಾಂಧಿಗೆ ಹೋಲಿಕೆ ಮಾಡುವುದು ಅಸಾಧ್ಯ ಎಂದು ಹೇಳಿದರು.

ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಮಾಡಲು ಮೋದಿ ತಮ್ಮ ‘ಮನ್ ಕಿ ಬಾತ್’ ನಲ್ಲಿ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಮೋದಿ ಮತ್ತು ಅಮಿತ್ ಶಾ ಅವರು ಕರ್ನಾಟಕದಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ,

ಹಣ ಹಾಗೂ ದಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವಿತ್ತು, ಆದರೆ ಇಂದು ಮತದಾರರು ಜಾಗೃತರಾಗಿದ್ದು, ಸೂಕ್ತ ಅಭ್ಯರ್ಥಿ ಮತ್ತು ಪಕ್ಷವನ್ನು ಆಯ್ಕೆ ಮಾಡುತ್ತಿದ್ದಾರೆ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರದಲ್ಲಿ ನೋಡಲು ಯುವಕರು ಬಯಸುತ್ತಿದ್ದಾರೆ. ಬಿಜೆಪಿಯ ಹಾಲಿ ಶಾಸಕ ಅನಿಲ ಬೆನಕೆ ಅವರು ಪಕ್ಷದ ತತ್ವಾದರ್ಶಗಳನ್ನು ಒಪ್ಪಿಕೊಂಡು ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ್ ಅವರಿಗೆ ಬೆಂಬಲ ಸೂಚಿಸಿ ಹಗಲಿರುಳು ಶ್ರಮಿಸುತ್ತಿದ್ದಾರೆ.

ನನಗೆ 81 ವರ್ಷವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಡೀ ರಾಜ್ಯದ ಪ್ರವಾಸವನ್ನು ಕೈಗೊಂಡಿದ್ದೇನೆ. ಇನ್ನೆರಡು ದಿನಗಳಲ್ಲಿ ಮಗನ ಕ್ಷೇತ್ರದಲ್ಲಿಯೂ ಪ್ರಚಾರ ನಡೆಸುತ್ತೇನೆಂದು ತಿಳಿಸಿದರು.

ಬಳಿಕ ಸಚಿವ ಗೋವಿಂದ ಕಾರಜೋಳ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೂ ಮಾತನಾಡಿದರು.

ಈ ಸಂದರ್ಭದಲ್ಲಿ ಅನಿಲ ಬೆನಕೆ, ಸಂಸದೆ ಮಂಗಳಾ ಅಂಗಡಿ, ರಾಜ್ಯ ಸಂಚಾಲಕ ಎಂ.ಬಿ.ಜಿರಲಿ, ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ, ಮುರುಗೇಂದ್ರಗೌಡ ಪಾಟೀಲ, ಉಪಮೇಯರ್ ರೇಷ್ಮಾ ಪಾಟೀಲ, ಕಾರ್ಪೊರೇಟರ್‌ಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here