ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ರಾಷ್ಟ್ರ ರಾಜಧಾನಿಯ ರೋಸ್ ಅವೆನ್ಯೂ ನ್ಯಾಯಾಲಯವು ದೋಷಮುಕ್ತಗೊಳಿಸಿದ ನಂತರ ತೆಲಂಗಾಣ ಜಾಗೃತಿ ಸಂಸ್ಥಾಪಕಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಶುಕ್ರವಾರ ‘ಸತ್ಯಕ್ಕೆ ಜಯ’ ಸಂದಿದೆ ಎಂದು ಹೇಳಿದ್ದಾರೆ.
ಈ ಪ್ರಕರಣವನ್ನು ‘ರಾಜಕೀಯ ಸೇಡಿನ’ ಭಾಗವಾಗಿ ತಮ್ಮ ವಿರುದ್ಧ ಹೇರಲಾಗಿತ್ತು ಎಂದು ಅವರು ಹೇಳಿದ್ದಾರೆ.
‘ಸತ್ಯಮೇವ ಜಯತೇ’ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಕೆ ಕವಿತಾ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ನಂತರ, ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ನ್ಯಾಯಾಂಗವು ಸುಳ್ಳಿನ ಜಾಲವನ್ನು ಕತ್ತರಿಸಿದೆ’ ಎಂದು ಹೇಳಿದರು.
Satyameva Jayate ✊
— Kavitha Kalvakuntla (@RaoKavitha) February 27, 2026
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ 2024ರ ಮಾರ್ಚ್ನಲ್ಲಿ ಬಂಧನಕ್ಕೊಳಗಾಗಿದ್ದ ಕವಿತಾ, ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಅದೇ ವರ್ಷ ಆಗಸ್ಟ್ 29 ರಂದು ದೆಹಲಿಯ ತಿಹಾರ್ ಜೈಲಿನಿಂದ ಹೊರಬಂದರು.
ಸಿಬಿಐ (ಕೇಂದ್ರ ತನಿಖಾ ದಳ) ತನಿಖೆ ನಡೆಸಿದ ಪ್ರಕರಣದ ಕುರಿತು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಆದೇಶ ಪ್ರಕಟಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶುಕ್ರವಾರ ನ್ಯಾಯಾಲಯ ಖುಲಾಸೆಗೊಳಿಸಿದೆ.
