ಬೆಂಗಳೂರು ಗ್ರಾಮಾಂತರ:
ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.
ಗೋಮಾಂಸ ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಗೋಮಾಂಸ ಸಾಗಾಟ ಮಾಡುವರು ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಶ್ರೀರಾಮಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಕಾರಿಗೆ ಬೆಂಕಿ ಹಚ್ಚಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗೂಡ್ಸ್ ವಾಹನಗಳಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ ಹಸುಗಳ ರುಂಡಗಳನ್ನು ಇರಿಸಿದ್ದಾರೆ. ಈ ವೇಳೆ ಕಾರ್ಯಕರ್ತ ಗೋಮಾಂಸ ಸಾಗಿಸುತ್ತಿದ್ದವನ ಎದಗೆ ಒದ್ದಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು. ಬಳಿಕ
ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸ್ಥಳದಲ್ಲಿ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಮೊಕ್ಕಾಂ ಹೂಡಿದ್ದಾರೆ. ಐಬಿ ವೃತ್ತ ಹಾಗೂ ಗುಂಜೂರು ಟೋಲ್ಗಳ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸಿದ್ದಾರೆ.