Home ಕರ್ನಾಟಕ ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ. ಸುರೇಶ್

ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ. ಸುರೇಶ್

33
0
ED raid on Congress MLA Zameer Khan is politically motivated says DK Suresh

ನವದೆಹಲಿ:

‘ಎರಡು ವರ್ಷಗಳ ಹಿಂದಿನ ಐಎಂಎ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಖಾನ್ ಅವರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ನಡೆಸಿರುವ ದಾಳಿ ರಾಜಕೀಯ ಪ್ರೇರಿತ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, ‘ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್ ಅವರು ಬಹಳ ಹಿಂದೆಯೇ ಇ.ಡಿ. ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಆದರೆ ಎರಡು ವರ್ಷಗಳ ನಂತರ ದೆಹಲಿ ಕಚೇರಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿರುವುದು ಆಶ್ಚರ್ಯ ಮೂಡಿಸಿದೆ. ಇದೊಂದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾರಣ, ಬೆಂಗಳೂರಿನಲ್ಲೇ ಇಡಿ ಕಚೇರಿ ಇದೆ. ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಹಿತಾಸಕ್ತಿ ಪ್ರೇರಿತ ಪ್ರಕರಣವನ್ನು ದೆಹಲಿಗೆ ವರ್ಗಾವಣೆ ಮಾಡಿಕೊಂಡು, ಸಂಬಂಧಪಟ್ಟವರಿಗೆ ರಾಜಕೀಯ ತೊಂದರೆ ನೀಡುವ ಪರಿಪಾಠವನ್ನು ಕೇಂದ್ರ ಸರ್ಕಾರ ಪಾಲಿಸುತ್ತಾ ಬಂದಿದೆ. ಇದನ್ನು ನಾವು ಬಹಳ ಹತ್ತಿರದಿಂದ ಗಮನಿಸುತ್ತಿದ್ದೇವೆ. ಇದು ದ್ವೇಷದ ರಾಜಕಾರಣ’ ಎಂದರು.

‘ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 41 ವರ್ಷಗಳ ನಂತರ ಭಾರತ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಇದು ನಮ್ಮೆಲ್ಲರಿಗೂ ಸಂತೋಷದ ವಿಚಾರವಾಗಿದ್ದು, ಇಡೀ ತಂಡಕ್ಕೆ ನಾವು ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ. ಇನ್ನು ಇತರೆ ಕ್ರೀಡಾಪಟುಗಳು ಸೆಮಿಫೈನಲ್ ಹಾಗೂ ಫೈನಲ್ ಸುತ್ತು ಪ್ರವೇಶಿಸಿದ್ದು, ಅವರಿಗೂ ಯಶಸ್ಸು ಸಿಗಲಿ, ಭಾರತದ ಪತಾಕೆ ಹಾರಲಿ ಎಂದು ಶುಭ ಹಾರೈಸುತ್ತೇನೆ’ ಎಂದು ಸುರೇಶ್ ತಿಳಿಸಿದರು.

LEAVE A REPLY

Please enter your comment!
Please enter your name here