Home ಬೆಂಗಳೂರು ನಗರ ಟೀಕೆ ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ- ಬೊಮ್ಮಾಯಿ

ಟೀಕೆ ಟಿಪ್ಪಣಿಗಳಿಗೆ ಅಳುಕದೇ ನ್ಯಾಯ ಸಮ್ಮತವಾಗಿ ಕೆಲಸ ಮಾಡಿ- ಬೊಮ್ಮಾಯಿ

106
0

ಬೆಂಗಳೂರು:

ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ ಈ ಎಲ್ಲ ಅಡ್ಡಿ ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿ ಗಳಿಗೆ ಉತ್ತರ ನೀಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಶುಕ್ರವಾರ ಬೆಂಗಳೂರಿನಲ್ಲಿ ಗೃಹ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪದಕ ವಿತರಿಸಿದ ನಂತರ ಅವರು ಮಾತನಾಡಿದರು.

ಕರ್ನಾಟಕ ಪೊಲೀಸರು ಹಲವಾರು ಪ್ರಕರಣಗಳಲ್ಲಿ ಸಾಹಸ ಮತ್ತು ಚಾಣಾಕ್ಷತನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅತ್ಯಂತ ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ. ಆ ಕಾರಣಕ್ಕಾಗಿಯೇ ದೇಶದಲ್ಲಿ ಕರ್ನಾಟಕ ಪೊಲೀಸ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದರೆ ಇದೆಲ್ಲದರ ಮಧ್ಯೆ ತನಿಖೆಯ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ ಇದಾವುದಕ್ಕೂ ವಿಚಲಿತರಾಗದೇ ವಿಷಕಂಠನಂತೆ ಕರ್ತವ್ಯ ನಿರ್ವಹಣೆ ಮಾಡುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ನೀಡಲಾಗುವುದು. ಇದಕ್ಕೆ ಕೆಎಸ್ ಆರ್ ಪಿ ಸಜ್ಜಾಗಿದೆ ಎಂದು ಅವರು ಹೇಳಿದರು.

Flag day event at Koramanagala KSRP police parade ground Basavaraj Bommai1

ಡ್ರಗ್ ವಿರುದ್ಧ ಸಮರ

ರಾಜ್ಯದಲ್ಲಿ ಕಳೆದ ಕೆಲ ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಡ್ರಗ್ ಪತ್ತೆ ಹಚ್ಚಿ ಸೀಜ್ ಮಾಡಿದ್ದೇವೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೋಗಿ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಮಾಡಿ ಸೆದೆ ಬಡಿದಿದ್ದೇವೆ. ಡ್ರಗ್ ವಿರುದ್ಧ ಸಮರ ಸಾರಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಪ್ರತಿ ಜಿಲ್ಲೆಗಳಿಗೆ ಒಂದರಂತೆ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಜರುಗಿಸಲಾಗುತ್ತಿದೆ. ಸೈಬರ್ ಅಪರಾಧಗಳನ್ನು ಪತ್ತೆ ಮಾಡಿದ್ದೇವೆ. ಬ್ಯಾಂಕುಗಳಲ್ಲಿ ನಡೆಯುವ ಫ್ರಾಡ್ ಗಳನ್ನು ಆರ್ ಬಿ ಐ ನೆರವಿನೊಂದಿಗೆ ಪತ್ತೆ ಮಾಡಿದ್ದೇವೆ. ಇದಕ್ಕೆ ಕಾರಣ ನಮ್ಮ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೆಚ್ವುಗೆ ವ್ಯಕ್ತಪಡಿಸಿದರು.

Flag day event at Koramanagala KSRP police parade ground Basavaraj Bommai2

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗೃಹ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಸಕಲ ರೀತಿಯ ನೆರವು ನೀಡಿದ್ದಾರೆ. ಪೊಲೀಸರಿಗೆ ಮನೆ ನಿರ್ಮಿಸುವ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆಗೆ ೨೦ ಕೋಟಿ ಅನುದಾನ ನೀಡಿದ್ದಾರೆ. ಆ ಪೈಕಿ ೭ ಕೋಟಿ ಹಣ ಮಂಜೂರು ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆ ಭರ್ತಿಗೆ ಸಮ್ಮತಿಸಿದ್ದಾರೆ. ಬಂದೊಬಸ್ತ್ ಭತ್ಯೆಯನ್ನು ೧೦೦ ರಿಂದ ೨೦೦ ರೂಪಾಯಿಗೆ ಹೆಚ್ವಿಸಿದ್ದಾರೆ. ಇಲಾಖೆಯ ಆದುನಿಕರಣ ಸೇರಿದಂತೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಿಎಂ ಯಡಿಯೂರಪ್ಪ ಎಲ್ಲ ರೀತಿಯ ನೆರವು ನೀಡಿದ್ದಾರೆ ಎಂದು ಬೊಮ್ಮಾಯಿ ಆವರು ಯಡಿಯೂರಪ್ಪ ಅವರ ಬಗ್ಗೆ ಮೆಚ್ವುಗೆಯ ಮಾತನಾಡಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಇಲಾಖೆ ಅಪರ್ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಪೊಲೀಸ್ ಧ್ವಜ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here