ಬೆಂಗಳೂರು:
ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಸೌಲಭ್ಯಗಳನ್ನು ವೇಗವಾಗಿ ಅಭಿವೃದ್ದಿಪಡಿಸಲಾಗುತ್ತಿದೆ. ಅಲ್ಲದೆ, ನೂತನ ಕೈಗಾರಿಕಾ ನೀತಿಯಲ್ಲಿ ಹಲವಾರು ರಿಯಾಯಿತಿಗಳನ್ನು ನೀಡಲಾಗಿದ್ದು, ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.
ಸಿಐಐ ಕರ್ನಾಟಕ ದ ವಾರ್ಷಿಕ ಸಭೆ 2021 – ಹೈ ಟೆಕ್ ಕರ್ನಾಟಕ ಬಿಯಾಂಡ್ ಬೆಂಗಳೂರು ನಲ್ಲಿ ಪಾಲ್ಗೊಂಡು ಮಾತನಾಡಿದರು. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರದ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕಾಗಿದೆ. ಹೀಗಾಗಿ, ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅಗತ್ಯವಿರುವ ಸೌಲಭ್ಯಗಳನ್ನು ವೇಗವಾಗಿ ಅಭಿವೃದ್ದಿಗೊಳಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಇತ್ತೀಚೆಗೆ ನೀತಿ ಹಾಗೂ ನಿಯಮಗಳಲ್ಲಿ ತಂದಿರುವ ಹಲವಾರು ಕ್ರಾಂತಿಕಾರಕ ಬದಲಾವಣೆಗಳಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಬಹಳ ಸುಲಭವಾಗಿದೆ. ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮ, ಅಫಿಡವಿಟ್ ಬೇಸ್ಡ್ ಕ್ಲೀಯರೆನ್ಸ್ ಸ್ಕೀಮ್, ಭೂ ಸುಧಾರಣಾ ಕಾಯ್ದೆಗಳ ಇದನ್ನು ಸಾಧ್ಯವಾಗಿಸಿವೆ.
ಅಲ್ಲದೆ, ನೂತನ ಕೈಗಾರಿಕಾ ನೀತಿಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಹೂಡಿಕೆಗೆ ಮುಂದಾಗುವವರಿಗೆ ಹಲವಾರು ರಿಯಾಯಿತಿ ಹಾಗೂ ಸೌಲಭ್ಯಗಳನ್ನು ನೀಡಲಾಗಿದೆ. ಎಲ್ಲಾ ಕ್ಷೇತ್ರದ ಕೈಗಾರಿಕೆಗಳಲ್ಲೂ ಪ್ರೊಡಕ್ಷನ್ ಬೇಸ್ಡ್ ಇನ್ಸೆಂಟೀವ್ಸ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಿ ಎಂದು ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಐಐ ಕರ್ನಾಟಕದ ಅಧ್ಯಕ್ಷ ರಾದ ಸಂದೀಪ್ ಸಿಂಗ್, ಇನ್ಫೋಸಿಸ್ ಲಿಮಿಟೆಡ್ ನ ದೀಪಕ್ ಪಡಕಿ, ವೋಲ್ವೋ ಗ್ರೂಪ್ ನ ಮ್ಯಾನೇಜಿಂಗ್ ಡೈರೆಕ್ಟರ್ ಕಮಲ್ ಬಾಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.