Former Prime Minister Rajiv Gandhi: ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಭಾನುವಾರ ಏರ್ಪಡಿಸಿದ್ದ ‘ರನ್ ಫಾರ್ ರಾಜೀವ್’ ಮ್ಯಾರಥಾನ್ ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು.
“ನಾನು ಕೂಡ ಚಿಕ್ಕ ವಯಸ್ಸಿನಲ್ಲಿ 10-15 ಕಿ. ಮೀ. ಓಡುತ್ತಿದ್ದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ರಾಜೀವ್ ಗಾಂಧಿ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು. ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಅದಕ್ಕೆ ರಾಜೀವ್ ಗಾಂಧಿ ಅವರು ನಾವು 16ನೇ ವಯಸ್ಸಿಗೆ ಎಸ್ ಎಸ್ ಎಲ್ ಸಿ ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ನೇಮಿಸುತ್ತೇವೆ. ಅದೇ ರೀತಿ ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು ಎಂದು ಹೇಳಿದರು” ಎಂದರು.
“ನಾನು ವಿದ್ಯಾರ್ಥಿಯಾಗಿದ್ದಾಗ ಎನ್ ಎಸ್ ಯು ಐ ನಾಯಕನಾಗಿದ್ದೆ. ಆಗ ನಮ್ಮ ಬಳಿ ಫೋನ್ ಇರಲಿಲ್ಲ. ಲ್ಯಾಂಡ್ ಲೈನ್ ಸಂಪರ್ಕ ಪಡೆಯಲು 3-4 ವರ್ಷ ಕಾಯಬೇಕಿತ್ತು. ತಂತ್ರಜ್ಞಾನ ಕ್ರಾಂತಿ ಮೂಲಕ ಇಂದು ನಿಮ್ಮೆಲ್ಲರ ಕೈಗೆ ಮೊಬೈಲ್ ಬರುವಂತೆ ಮಾಡಿರುವುದೇ ರಾಜೀವ್ ಗಾಂಧಿ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಧೀಮಂತ ನಾಯಕರ ನೆನಪಲ್ಲಿ ನೀವು ಹೆಜ್ಜೆ ಹಾಕಲು ಬಂದಿದ್ದೀರಿ. ನಿಮಗೆ ಅಭಿನಂದನೆಗಳು” ಎಂದು ಹೇಳಿದರು.
“ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ, ಆರೋಗ್ಯ, ಐಶ್ವರ್ಯ ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ” ಎಂದರು.
“ಬೆಂಗಳೂರು ಈಗ ಗ್ರೇಟರ್ ಬೆಂಗಳೂರು ಆಗಿದೆ. ಇತ್ತೀಚಿಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಬೆಂಗಳೂರಿನ ಮೂಲಕ ನೋಡಲಾಗುತ್ತಿದೆ ಎಂದರು. ಇದು ಸಾಧ್ಯವಾಗಿದ್ದು ನಿಮ್ಮೆಲ್ಲರಿಂದ” ಎಂದು ತಿಳಿಸಿದರು.
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ರಾಜೀವ್ ಗಾಂಧಿ ಅವರ ನೆನಪಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಯುವಕರು ಭಾಗವಹಿಸಿದ್ದು, ನಮ್ಮ ಯುವ ನಾಯಕರು ಈ ಕಾರ್ಯಕ್ರಮ ಆಯೋಜಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಹೇಳಿದರು.