Home ಕೊಡಗು ಮಡಿಕೇರಿ ಜಿಲ್ಲೆಯ ಕ್ರೀಡಾಂಗಣ ಹಾಗೂ ಕ್ರೀಡಾ ಶಾಲೆ ಅಭಿವೃದ್ಧಿಗೆ ಅನುದಾನ- ಸಚಿವ ಡಾ.ನಾರಾಯಣಗೌಡ

ಮಡಿಕೇರಿ ಜಿಲ್ಲೆಯ ಕ್ರೀಡಾಂಗಣ ಹಾಗೂ ಕ್ರೀಡಾ ಶಾಲೆ ಅಭಿವೃದ್ಧಿಗೆ ಅನುದಾನ- ಸಚಿವ ಡಾ.ನಾರಾಯಣಗೌಡ

41
0
Advertisement
bengaluru

ಮಡಿಕೇರಿ:

ವಿರಾಜಪೇಟೆ ಕ್ರೀಡಾಂಗಣ ಮತ್ತು ಜನರಲ್ ತಿಮ್ಮಯ್ಯ ಕ್ರೀಡಾಂಗಣ ಉನ್ನತ್ತೀಕರಣಕ್ಕೆ ರೂ. 50 ಲಕ್ಷ ಹಾಗೂ ಕೂಡಿಗೆ ಕ್ರೀಡಾ ಶಾಲೆಯ ವಿವಿಧ ಆಭಿವೃದ್ಧಿ ಕಾಮಗಾರಿಗಳಿಗೆ ರೂ. 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮತ್ತು ಬೆಳೆ ವಿಮೆ ಪರಿಹಾರ ಕುರಿತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಾಗೂ ಕ್ರೀಡಾಂಗಣ ಅಭಿವೃದ್ದಿಗಾಗಿ ರೂಪಿಸಿರುವ ಯೋಜನೆಗಳ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

bengaluru bengaluru

ಕೋವಿಡ್-19 ಮಹಾಮಾರಿಯಿಂದಾಗಿ ಕೀಡಾ ಚಟುವಟಿಕೆಗಳು ಸ್ಥಗಿತವಾಗಿದ್ದು, ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯಲ್ಲಿ ಕ್ರೀಡೆ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದರು.

Grant for Development of Sports and Sports School in Madikeri Karnataka Minister Narayana Gowda

ಜಿಲ್ಲೆಯ ಪೊನ್ನಂಪೇಟೆ ಕ್ರೀಡಾ ವಸತಿ ನಿಲಯಕ್ಕೆ ಈಗಾಗಲೇ ಖೇಲೋ ಇಂಡಿಯಾ ಘೋಷಣೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಕ್ರೀಡಾ ಇಲಾಖೆ ಆಯುಕ್ತರನ್ನು ಒಳಗೊಂಡ ಸಮಿತಿ ಸದ್ಯದಲ್ಲಿಯೇ ಜಿಲ್ಲೆಗೆ ಆಗಮಿಸಲಿದ್ದು, ಜನಪ್ರತಿನಿಧಿಗಳನ್ನು ಗಮನಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಶೀಲಿಸಿ ಕ್ರಮವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಹಿನ್ನಲೆಯಲ್ಲಿ ವಿವಿಧ ಯುವಜನ ಕಾರ್ಯಕ್ರಮಗಳು ಈ ಬಾರಿ ನಡೆದಿರುವುದಿಲ್ಲ. ಅವುಗಳ ಅನುದಾನವನ್ನು ಬದಲಾವಣೆ ಮಾಡಿಕೊಂಡು ಕ್ರೀಡಾಂಗಣದ ಕೆಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಸಹ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೈಗೊಳ್ಳಬಹುದಾಗಿದ್ದು, ಕ್ರೀಡಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಿವಂತೆ ತಿಳಿಸಿದರು.

ಶಾಸಕರಾದ ಸುನೀಲ್ ಸುಬ್ರಮಣಿ ಅವರು ಮಾತನಾಡಿ ಸೋಮವಾರಪೇಟೆ ತಾಲ್ಲೂಕಿನ ಹಾಕಿ ಕ್ರೀಡಾಂಗಣ ಕಾಮಗಾರಿ ವೈಜ್ಞಾನಿಕವಾಗಿ ನಡೆಯುತ್ತಿಲ್ಲವೆಂದು ದೂರು ಕೇಳಿ ಬರತ್ತಿದ್ದು ಈ ಬಗ್ಗೆ ಗಮನಹರಿಸಬೇಕಿದೆ ಎಂದು ಸಚಿವರ ಗಮನಕ್ಕೆ ತಂದರು. ಕ್ರೀಡಾಂಗಣದ ಸುತ್ತಲು ರಿಟೈನಿಂಗ್ ವಾಲ್ ಮತ್ತು ಚರಂಡಿ ಕಾಮಗಾರಿಗಳನ್ನು ಶೀರ್ಘವೇ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಶಾಸಕರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಹೊದ್ದುರು ಗ್ರಾಮದಲ್ಲಿ ಈಗಾಗಲೇ ಕ್ರಿಕೇಟ್ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಲಾದ ಸ್ಥಳದ ಸರ್ವೇ ಕಾರ್ಯ ಶೀರ್ಘವೇ ಪೂರ್ಣಗೊಳಿಸಬೇಕು ಎಂದು ಸಚಿವರ ಗಮನಕ್ಕೆ ತಂದರು.

ಸಚಿವರಾದ ಡಾ.ನಾರಾಯಣಗೌಡ ಅವರು ಪ್ರತಿಕ್ರಿಯಿಸಿ ಈ ಸಂಬಂಧ ಜಿಲ್ಲಾಧಿಕಾರಿಯವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ 10 ಕೋಟಿ ಹಣ ವೆಚ್ಚವಾಗಿರುವುದಿಲ್ಲ. ಈ ಬಗ್ಗೆ ಕಳವಳ ವ್ಯಕ್ತ ಪಡಿಸಿದ ಸಚಿವರು, ಇವುಗಳನ್ನು ಕೇಂದ್ರ ಹಾಗೂ ಉನ್ನತ ಮಟ್ಟದಲ್ಲಿ ಪರಿಶೀಲಿಸಿದಾಗ ಅನುದಾನ ವೆಚ್ಚವಾಗದೇ ಇರುವುದು ಕಂಡು ಬಂದರೆ ಆರ್ಥಿಕ ಇಲಾಖೆ ಹಾಗೂ ಕೇಂದ್ರ ಸರ್ಕಾರದಿಂದ ಮುಂದಿನ ಅನುದಾನ ಬಿಡುಗಡೆಯಾಗುವುದಿಲ್ಲ. ಈ ಯೋಜನೆಯ ಹಣವನ್ನು ಕೋವಿಡ್ ಕೆಲಸಗಳಿಗೂ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಕಾಮಗಾರಿಗಳನ್ನು ಕೈಗೊಂಡು ಒಂದು ತಿಂಗಳೊಳಗಾಗಿ ಅನುದಾನ ವೆಚ್ಚ ಮಾಡುವುದು, ಇಲ್ಲವಾದಲ್ಲಿ ಹಿಂಪಡೆಯಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರು 1,779 ಕಾಮಗಾರಿ ಮಾಡಲು ಸೂಚಿಸಿದ್ದು, 1,659 ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಹಾಗೂ 1,355 ಕಾಮಾಗಾರಿ ಪೂರ್ಣಗೊಂಡಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರು ಮಾತನಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಬಿಲ್ಲು ಪಾವತಿ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಲ್ಲು ಪಾವತಿ ಸಂಬಂಧ ವಿಳಂಬವಾಗುತ್ತಿಲ್ಲ. ಒಂದು ವೇಳೆ ಬಿಲ್ಲು ಪಾವತಿ ಸಂಬಂಧ ಸಿಬ್ಬಂದಿಗಳು ವಿಳಂಭ ಮಾಡಿದರೆ ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದ್ದು, ಈ ಬಗ್ಗೆ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಹೆಚ್ಚಿನ ರೈತರನ್ನು ನೊಂದಣಿ ಮಾಡಿ ಎಂದು ಸಚಿವರಾದ ಡಾ. ನಾರಾಯಣಗೌಡ ಅವರು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಚಂದ್ರಶೇಖರ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ,
ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ ಪ್ರಭಾಕರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.


bengaluru

LEAVE A REPLY

Please enter your comment!
Please enter your name here