ಬೆಂಗಳೂರು: ಟನೆಲ್ ರಸ್ತೆ ಯೋಜನೆ ಕೈಬಿಟ್ಟು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು.
ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದರು. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದರು.
ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರ್ಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ. ಅದರ ಬದಲಿಗೆ ಮೆಟ್ರೋ ಬೋಗಿಗಳನ್ನು ಹೆಚ್ಚಿಸಬೇಕು. ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಿ ಮಾರ್ಗೋಪಾಯಗಳನ್ನು ಚರ್ಚಿಸಬೇಕಿದೆ. ಅವೈಜ್ಞಾನಿಕ ಟನೆಲ್ ರಸ್ತೆ ಯೋಜನೆ ಕೈಬಿಡಬೇಕು ಎಂಬ ಕುರಿತು ಸಮಗ್ರ ಚರ್ಚೆ ಆಗಿದೆ ಎಂದು ತಿಳಿಸಿದರು.