I will visit Ayodhya after January 22 and offer puja: Chief Minister Siddaramaiah | ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ :
ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನುಡಿದರು.
ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ರಾಜಕೀಯ ಮಾಡಲು ಹೊರಟಿದೆ
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದರು.
ಮೂವರು ಡಿಸಿಎಂ: ಚರ್ಚಿಸುವುದಿಲ್ಲ
ಮೂರು ಡಿಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.
ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ
ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು.
ನುಂಗಲಾರದ ತುತ್ತು
ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ ಎಂದರು.
