Karnataka Budget 2023: Totally People's Budget says Minister MB Patil
ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು ಉದ್ದಿಮದಾರರು ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಒಳಿತಿನ ಬಗ್ಗೆ ಗಮನ ಹರಿಸಿರುವ ಜನಪರ ಬಜೆಟ್ ಆಗಿದೆ. ಜತೆಗೆ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರಕಾರ ಮಾಡಿದ ಅಕ್ರಮಗಳನ್ನು ಇದು ರಾಜ್ಯದ ಜನರಿಗೆ ತೋರಿಸಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಶುಕ್ರವಾರ ಬಜೆಟ್ ಮಂಡನೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ನಾವು ಚುನಾವಣೆಗೆ ಮೊದಲೇ ಮಾತು ಕೊಟ್ಟಿದ್ದಂತೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದೇವೆ. ಬಜೆಟ್ನಲ್ಲಿ ಇದಕ್ಕೆ ಒಟ್ಟು 52 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ. ರಾಜ್ಯಕ್ಕೆ ಹೇಗೆ ಆದಾಯ ತರಬೇಕೆಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆ. ನಮ್ಮ ಬಜೆಟ್ಟನ್ನು ಕಂಡು ಈಗಾಗಲೇ ಜನರಿಂದ ತಿರಸ್ಕೃತರಾಗಿರುವ ಬಿಜೆಪಿ ಮತ್ತಷ್ಟು ಹತಾಶವಾಗಿದೆ” ಎಂದರು.
ಬಿಜೆಪಿಯವರು ಬಜೆಟ್ನ ಅಳತೆಯನ್ನೂ ಮೀರಿ ಯಾವ್ಯಾವುದೋ ನೀರಾವರಿ ಯೋಜನೆಗಳಿಗೆಲ್ಲ ಟೆಂಡರ್ ಕರೆದಿದ್ದರು. ಇನ್ನೊಂದು ಕಡೆ ಶೇಕಡ 40ರಷ್ಟು ಕಮಿಷನ್ ಹೊಡೆಯುತ್ತಿದ್ದರು. ಅವರ ಬಣ್ಣವನ್ನು ನಾವು ಬಯಲಿಗೆಳೆದಿದ್ದೇವೆ. ನಾವು ಬಿಜೆಪಿಯವರಿಂದ ಏನನ್ನೂ ಕಲಿಯಬೇಕಾಗಿಲ್ಲ. ಜನರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯವರು ಈಗ ಅಂಬೇಡ್ಕರ್ ಹೆಸರನ್ನು ಹೇಳುತ್ತಿದ್ದಾರೆ. ಆದರೆ ತಮ್ಮ ಪಕ್ಷದಲ್ಲೇ ಅವರು ಹಿರಿಯರಾದ ಆಡ್ವಾಣಿ, ಯಡಿಯೂರಪ್ಪ ಅವರನ್ನೆಲ್ಲ ಮೂಲೆಗುಂಪು ಮಾಡಿದ್ದಾರೆ. ಜೊತೆಗೆ ಆ ಪಕ್ಷದ ನಾಯಕರು ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡಿದ್ದರು. ಹೀಗಾಗಿಯೇ ಆ ಪಕ್ಷವನ್ನು ಜನ ದೂರವಿಟ್ಟಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
