ಬೆಂಗಳೂರು:
ಇಂದು ರಾತ್ರಿಯಿಂದ ಆರಂಭವಾಗಲಿರುವ ೧೪ ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಜನ ತಮ್ಮಷ್ಟಕ್ಕೆ ತಾವೇ ಸ್ವಯಂ ನಿಯಂತ್ರಣ ಮಾಡಿಕೊಂಡರೆ ಕೊರೊನಾ ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರವನ್ನು ಬಯಸುತ್ತೇನೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಜಾರಿಗೊಳಿಸಲಾಗಿದೆ. ಈ ಬಿಗಿ ಕ್ರಮಕ್ಕೆ ಜನ ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಾದ ಅವಶ್ಯಕತೆಯಿದೆ. ಸ್ವಯಂ ನಿಯಂತ್ರಣದಲ್ಲಿಯೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು .
ಈ 14ದಿನಗಳ ಕಾಲ ಪ್ರತಿಯೊಬ್ಬರು ಜಾಗೃತರಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ಹೀಗಾಗಿ ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ನಮ್ಮ ಮುಖ್ಯಮಂತ್ರಿಗಳು ಬಿಗಿ ಕ್ರಮದ ತೀರ್ಮಾನ ಮಾಡಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕರ್ಫ್ಯೂ ಸಂದರ್ಭದಲ್ಲಿ ವಿನಾಕಾರಣ ಹೊರಗೆ ಓಡಾಡುವ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಉದ್ದೇಶಪೂರ್ವಕವಾಗಿ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡುವ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು