ಶಿಗ್ಗಾವಿ:
ಇನ್ನು ಮುಂದೆ ಹೊರ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡಬೇಕೆಂದರೆ ಕೋವಿಡ್ ಟೆಸ್ಟ್ ನೆಗೆಟಿವ್ ಇರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ ಶಿಗ್ಗಾವಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ನಿಯಮವನ್ನು ಪರಿಪಾಲನೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ
ರಾಜ್ಯದಲ್ಲಿ ಲಾಕ್ಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಲವಾರು ನಿರ್ಬಂಧ ಹಾಕಲಾಗಿದೆ. ಎಲ್ಲ ಕಡೆ ಪೊಲೀಸ್ ನಾಕಾಬಂದಿ ಹಾಕಲಾಗಿದೆ. ವಿಶೇಷವಾಗಿ ಗಡಿ ಪ್ರದೇಶದಲ್ಲಿ ಮತ್ತಷ್ಟು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಯಾರ ಕೋವಿಡ್ ಟೆಸ್ಟ್ ನೆಗೆಟಿವ್ ಇರುತ್ತೋ ಅವರನ್ನು ಮಾತ್ರ ಕರ್ನಾಟಕದ ಒಳಗೆ ಬಿಡಲಾಗುವುದು. ಇದು ಕೇಂದ್ರ ಸರ್ಕಾರದ ಸೂಚನೆ. ಅದನ್ನು ಮಾತ್ರ ನಾವು ಪರಿಪಾಲನೆ ಮಾಡುತ್ತೇವೆ.
ಬಸವರಾಜ ಬೊಮ್ಮಾಯಿ
ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು
ಗಡಿಜಿಲ್ಲೆಗಳ ಮೂಲಕ ಹೊರರಾಜ್ಯದವರು ಕರ್ನಾಟಕವನ್ನು ಪ್ರವೇಶ ಬೇಕೆಂದರೆ ಅವರು ಕೋವಿಡ್ ನೆಗೆಟಿವ್ ಟೆಸ್ಟ್ ರಿಪೋರ್ಟ್ ಇಟ್ಟುಕೊಂಡಿರುವುದು ಕಡ್ಡಾಯ. ಇಲ್ಲದಿದ್ದರೆ ಯಾರನ್ನೂ ಕರ್ನಾಟಕದ ಒಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಈ ಸಂಬಂಧ ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಕಲಬುರ್ಗಿ, ಮಂಗಳೂರು, ಉಡುಪಿ ಗಡಿ ಜಿಲ್ಲೆಗಳಲ್ಲಿ ಹಾಗೂ ಆನೆಕಲ್ಲ್ ನಲ್ಲಿ ಕಠಿಣ ನಿರ್ಬಂಧ ಹೇರುವಂತೆ ಆದೇಶಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.