CEPMIZ ಅಡಿ ಗಣಿಗಾರಿಕೆ ಬಾಧಿತ ಜಿಲ್ಲೆಗಳ ಪ್ರವಾಸೋದ್ಯಮ, ಕೌಶಲ್ಯಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ
ಬೆಂಗಳೂರು: ರಾಜ್ಯದ ಗಣಿಗಾರಿಕೆ ಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ CEPMIZ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಪ್ರವಾಸೋದ್ಯಮ ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಮಂಗಳವಾರ ಪರಿಶೀಲಿಸಲಾಯಿತು ಎಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ತುಮಕೂರು, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಯೋಜನೆಗಳ ಪ್ರಗತಿ, ಅಗತ್ಯ ಮೂಲಸೌಕರ್ಯ ಮತ್ತು ಮುಂದಿನ ಹಂತದ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಥೀಮ್ ಪಾರ್ಕ್, ಕೌಶಲ್ಯಾಭಿವೃದ್ಧಿ ಮತ್ತು ಹಾಸ್ಪಿಟಾಲಿಟಿ ತರಬೇತಿ ಕೇಂದ್ರ ಹಾಗೂ ಕನ್ವೆನ್ಷನ್ ಸೆಂಟರ್ ಸೇರಿದಂತೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಗಳ ಮೂಲಕ ಪ್ರವಾಸಿಗರಿಗೆ ಹೊಸ ಅನುಭವಗಳನ್ನು ಕಲ್ಪಿಸುವುದರ ಜೊತೆಗೆ ಸ್ಥಳೀಯ ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಲಾಗುತ್ತಿದೆ ಎಂದು ಮನೋಹರ್ ಹೇಳಿದ್ದಾರೆ.
ಪ್ರವಾಸೋದ್ಯಮ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಗಣಿಗಾರಿಕೆ ಬಾಧಿತ ಪ್ರದೇಶಗಳ ಅಭಿವೃದ್ಧಿಯನ್ನು ಕೇವಲ ಭೌತಿಕ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತಗೊಳಿಸದೆ, ಪ್ರವಾಸೋದ್ಯಮ, ಕೌಶಲ್ಯಾಭಿವೃದ್ಧಿ, ಸ್ಥಳೀಯ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳೊಂದಿಗೆ ಜೋಡಿಸುವ ಮೂಲಕ ದೀರ್ಘಕಾಲೀನ ಹಾಗೂ ಸುಸ್ಥಿರ ಅಭಿವೃದ್ಧಿಗೆ ಅವಕಾಶ ಕಲ್ಪಿಸುವುದು ಇಲಾಖೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಣಿಗಾರಿಕೆಯಿಂದ ಬಾಧಿತ ಪ್ರದೇಶಗಳಲ್ಲಿ ಹೊಸ ಆರ್ಥಿಕ ಚಟುವಟಿಕೆಗಳನ್ನು ಬೆಳೆಸುವ ಮೂಲಕ ಪ್ರವಾಸೋದ್ಯಮವನ್ನು ಸ್ಥಳೀಯ ಅಭಿವೃದ್ಧಿಯ ಸಾಧನವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಯೋಜಿತವಾಗಿ ಮುಂದುವರಿಯಲಾಗುತ್ತಿದೆ ಎಂದು ಮನೋಹರ್ ಹೇಳಿದ್ದಾರೆ.
