Home ಬೆಂಗಳೂರು ನಗರ ಮುಂದಿನ ವರ್ಷ ಯುವ ಬಜೆಟ್: ಮುಖ್ಯಮಂತ್ರಿಯವರಿಗೆ ಯುವ ನೀತಿ ಕರಡು ಸಲ್ಲಿಕೆ

ಮುಂದಿನ ವರ್ಷ ಯುವ ಬಜೆಟ್: ಮುಖ್ಯಮಂತ್ರಿಯವರಿಗೆ ಯುವ ನೀತಿ ಕರಡು ಸಲ್ಲಿಕೆ

43
0
Karnataka to present Youth Budget next year: Draft Youth Policy report submitted to Chief Minister

ಬೆಂಗಳೂರು:

ಡಾ. ಆರ್.ಬಾಲಸುಬ್ರಹ್ಮಣ್ಯ ಸಮಿತಿಯು ಇಂದು ಕರಡು ಯುವ ನೀತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ದೇಶದ ಶೇ. 46 ರಷ್ಟು ಜನಸಂಖ್ಯೆ ಯುವಕರಾಗಿದ್ದು, ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್ ಅನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಯುವ ನೀತಿಯ ಕರಡನ್ನು ಕೂಡಲೇ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡು ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಈ ಕರಡು ಯುವ ನೀತಿಯ ಮುಖ್ಯಾಂಶಗಳನ್ನು ಉಲ್ಲೇಖಿಸಿದ ಡಾ. ಬಾಲಸುಬ್ರಹ್ಮಣ್ಯ ಅವರು ಯುವ ನೀತಿಯು ಯುವ ಕೇಂದ್ರಿತವಾಗಿದ್ದು, ನೀತಿಯ ಅನುಷ್ಠಾನಕ್ಕೆ ಕಾರ್ಯತಂತ್ರ, ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನದ ಅಂಶಗಳನ್ನೂ ಒಳಗೊಂಡಿದೆ. ಸುಸ್ಥಿರ ಅಭಿವೃದ್ಧಿ ಗುರಿಯೊಂದಿಗೂ ಸಂಯೋಜನೆ ಮಾಡಲಾಗಿದೆ ಎಂದು ವಿವರಿಸಿದರು.

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ:

ಆಯವ್ಯಯದಲ್ಲಿ ಯುವಕರು ಸ್ವ ಉದ್ಯೋಗ ಕೈಗೊಳ್ಳಲು ರೂಪಿಸಿರುವ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಯುವಕರ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಆಗಿ ನೇಮಕಗೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ಈ ಸಂದರ್ಭದಲ್ಲಿ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ರಾಜ್ಯದ ಪ್ರತಿ ಗ್ರಾಮದಲ್ಲಿ ಯುವ ಸ್ವಸಹಾಯ ಸಂಘಗಳನ್ನು ರಚಿಸಿ, ಸ್ವ ಉದ್ಯೋಗ ಕೈಗೊಳ್ಳಲು ತರಬೇತಿ, ಬೀಜಧನ ಹಾಗೂ ಮಾರುಕಟ್ಟೆ ಅವಕಾಶ ಕಲ್ಪಿಸುವ ಮೂಲಕ ಯುವಕರ ಆರ್ಥಿಕ ಸಬಲೀಕರಣ ಸಾಧಿಸುವ ಗುರಿಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಸಚಿವರಾದ ವಿ.ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಎಂ.ಎಸ್. ಶ್ರೀಕರ್ ಹಾಗೂ ಜಯರಾಮ್ ರಾಯಪುರ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here