Karnataka Transport Strike: KSRTC ಕಾರ್ಮಿಕರ ಮುಷ್ಕರಕ್ಕೆ ಒಂದು ದಿನ ತಡೆ — ವೇತನ ಬಾಕಿ, ವೇತನ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಬೆಂಗಳೂರು:
ಸತತ 15 ದಿನಗಳ ಸಾರಿಗೆ ಮುಷ್ಕರಕ್ಕೆ ತಾತ್ಕಾಲಿಕ ಬಿಡುಗಡೆ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಸದ್ಯ ಮುಷ್ಕರವನ್ನು ಮುಂದೂಡುತ್ತೇವೆ. ಆದರೆ ಇದು ತಾತ್ಕಾಲಿಕವಷ್ಟೇ ಎಂದು ಅವರು ತಿಳಿಸಿದರು.
ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿದೆ. ನ್ಯಾಯಮೂರ್ತಿಗಳ ಹೇಳಿಕೆಯನ್ನು ನಾವು ಗೌರವಿಸುತ್ತೇವೆ.
ಕೊವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ. ಇದರಿಂದ ಜನರಿಗೆ ತೊಂದರೆ ಕೊಡಬೇಡಿ ಎಂದು ಹೇಳಿದ್ದಾರೆ. ಹೀಗಾಗಿ ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ತಿಳಿಸಿದರು.
ಆದರೆ, ಮುಷ್ಕರದ ವೇಳೆ 2169 ಮಂದಿ ವಜಾ ಮಾಡಲಾಗಿದೆ. 2941 ಅಮಾನತು ಮಾಡಲಾಗಿದೆ. 7646 ಮಂದಿಗೆ ಶೋಕಾಸ್ ನೋಟೀಸ್ ನೀಡಿದೆ. 8 ಸಾವಿರ ಮಂದಿಯನ್ನು ವರ್ಗಾವಣೆ ಮಾಡಲಾಗಿದೆ. ಒಟ್ಟು 20 ಸಾವಿರ ನೌಕರರ ಮೇಲೆ ದಮನಕಾರಿ ನೀತಿ ಅನುಸರಿಲಾಗಿದೆ. ಸರ್ಕಾರದ ಈ ಎಲ್ಲಾ ನಿರ್ಧಾರ ವಾಪಾಸ್ ಪಡೆಯಬೇಕು. ನೌಕರರ ವಿರುದ್ಧ ಕೈಗೊಂಡ ಕ್ರಮ ಕೈಬಿಡಬೇಕು ಎಂದು ಹೇಳಿದರು.
ಅದರೊಂದಿಗೆ, ಸಿಎಂ ಯಡಿಯೂರಪ್ಪರಿಗೂ ಆರೋಗ್ಯ ಸರಿ ಇಲ್ಲ. ಮೇ ತಿಂಗಳಿನಲ್ಲಿ ಸಿಎಂ ಯಡಿಯೂರಪ್ಪ ಚರ್ಚಿಸೋಣ ಎಂದಿದ್ದಾರೆ. ಒಟ್ಟಾರೆಯಾಗಿ ನಾಳೆಯಿಂದ ಎಲ್ಲಾ ನೌಕರರು ಕೆಲಸಕ್ಕೆ ಹಾಜರಾಗುತ್ತಿದ್ದೇವೆ ಎಂದು ಅವರು ವಿವರಿಸಿದರು.