ಮುಂಬೈ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ LPG ಕೊರತೆಯಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ದೇಶೀಯ ಮತ್ತು ಅಂತರರಾಷ್ಟ್ರೀಯ ವಲಯಗಳಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಬಾಂಬೆ ಹೈಕೋರ್ಟ್ಗೆ ಭರವಸೆ ನೀಡಿದೆ.
ನಾಗ್ಪುರದ ಹೈಕೋರ್ಟ್ ಪೀಠ, ಕೇಂದ್ರದ ಭರವಸೆಯನ್ನು ಸ್ವೀಕರಿಸಿ LPG ವಿತರಕರು ಸಲ್ಲಿಸಿದ ಅರ್ಜಿಯನ್ನು ವಿಲೇವಾರಿ ಮಾಡಿದೆ. “ವ್ಯಕ್ತಿಗಳ ಹಿತಾಸಕ್ತಿ ರಕ್ಷಿಸಲು ಈ ವಿಷಯದಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು” ಸರ್ಕಾರ ತೆಗೆದುಕೊಳ್ಳುತ್ತಿದೆ ಎಂಬುದನ್ನು ಕೋರ್ಟ್ ಗಮನಿಸಿತು.
ಇಸ್ರೇಲ್, ಅಮೆರಿಕ – ಇರಾನ್ ಯುದ್ಧದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಮಧ್ಯೆ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯನ್ನು ಹೆಚ್ಚಿಸುವಂತೆ ಕೋರಿ ಆರು LPG ವಿತರಕರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಸಂಬಂಧ ಮಾರ್ಚ್ 12 ರಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಖಾಸಗಿ ಸಂಸ್ಥೆಗೆ ನೋಟಿಸ್ ಜಾರಿ ಮಾಡಿತ್ತು.
ಮನೆಗಳ ಬಳಕೆಗಾಗಿ LPG ಸಂಗ್ರಹಣೆ ಮತ್ತು ಪೂರೈಕೆಗೆ ಚಾಲ್ತಿಯಲ್ಲಿರುವ ನೀತಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.
ಅಡುಗೆ ಅನಿಲ ವಿತರಣೆಗೆ ಆದ್ಯತೆ ನೀಡುವ ಕೇಂದ್ರದ ನಿರ್ದೇಶನದ ಹೊರತಾಗಿಯೂ ನಾಗ್ಪುರ ಪ್ರಧಾನ ಕಚೇರಿಯ ಕಾನ್ಫಿಡೆನ್ಸ್ ಪೆಟ್ರೋಲಿಯಂ ಇಂಡಿಯಾ ಲಿಮಿಟೆಡ್ ಗೃಹಬಳಕೆಯ LPG ಸಿಲಿಂಡರ್ಗಳ ಪೂರೈಕೆಯನ್ನು ಹೆಚ್ಚಿಸಲು ವಿಫಲವಾಗಿದೆ ಎಂದು ಅರ್ಜಿದಾರರು ದೂರಿದ್ದರು.
ಕೇಂದ್ರ ಸರ್ಕಾರ, ವಕೀಲರಾದ ಶ್ಯಾಮ್ ದೇವಾನಿ ಮತ್ತು ಸಾಹಿಲ್ ದೇವಾನಿ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಯುದ್ಧವು ಜಾಗತಿಕ ಕಚ್ಚಾ ತೈಲ ಪೂರೈಕೆಗೆ ಅಡ್ಡಿಪಡಿಸಿದೆ. ಇದರಿಂದಾಗಿ ದೇಶದಲ್ಲಿ ಎಲ್ಪಿಜಿ ಕೊರತೆ ಉಂಟಾಗಿದೆ. ಇದರ ನಂತರ, ಸಚಿವಾಲಯವು ಗೃಹ ಬಳಕೆ ಎಲ್ಪಿಜಿ ಉತ್ಪಾದನೆ ಮತ್ತು ಪೂರೈಕೆಗೆ ಆದ್ಯತೆ ನೀಡಬೇಕೆಂದು ನಿರ್ದೇಶಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರವು ಹೈಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ ಎಂದು ವಕೀಲ ದೇವಾನಿ ಪಿಟಿಐಗೆ ತಿಳಿಸಿದ್ದಾರೆ.
ಎಲ್ಪಿಜಿ ಕೊರತೆಯಿಂದ ಉಂಟಾದ ತೊಂದರೆಗಳನ್ನು ಪರಿಹರಿಸಲು ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು. ಅಂತರರಾಷ್ಟ್ರೀಯ ಬಿಕ್ಕಟ್ಟು ಭಾರತದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
