ಬೆಂಗಳೂರು:
ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಮಾರ್ಗ 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಆರ್ಸಿಎಲ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ರೈಲು ಸೇವೆ ಸುಧಾರಣೆಗಾಗಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದ್ದೇನೆ ಎಂದರು.
ಪ್ರಯಾಣಿಕರಿಂದ ನಮ್ಮ ಮೆಟ್ರೋಗೆ 48 ಕೋಟಿ ರೂಪಾಯಿ ಆದಾಯ ಬರುತ್ತಿದ್ದು, ಖರ್ಚು ಕಳೆದು 6 ಕೋಟಿ ರೂಪಾಯಿ ಲಾಭ ಬರುತ್ತಿದೆ. ಜಾಹೀರಾತಿನಿಂದಲೂ ಸಾಕಷ್ಟು ಲಾಭ ಬರುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ದೆಹಲಿ ಮೆಟ್ರೋ ರೈಲು ನಂತರ ನಮ್ಮದು ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಆಗಿದ್ದು, ವಿಶ್ವದರ್ಜೆ ಮಟ್ಟದ ಸೇವೆ ನೀಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಹಯೋಗದಲ್ಲಿ ನಮ್ಮ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಆದಾಯ ಗಳಿಸುವ ಕುರಿತು ನಾನು ಕೆಲವು ಸಲಹೆ ನೀಡಿದ್ದೇನೆ. ಜಾಹೀರಾತು ಬಗ್ಗೆ ಇರುವ ನಿರ್ಬಂಧವನ್ನು ಸರಿಪಡಿಸುತ್ತೇವೆ. ಇದರ ಜತೆಗೆ ಅವರಿಗೆ ಸಬ್ಸಿಡಿಯಲ್ಲಿ ಸಿಗುತ್ತಿರುವ ವಿದ್ಯುತ್ ಅನ್ನು ಗ್ರೂಪ್ ಕ್ಯಾಪಿಟಿವ್ ಮೂಲಕ ಮತ್ತಷ್ಟು ಕಡಿಮೆ ದರಕ್ಕೆ ಪಡೆಯುವ ಸಲಹೆ ನೀಡಿದ್ದೇನೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಆರ್ಸಿಎಲ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಸೇವೆ ಸುಧಾರಣೆಗಾಗಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದೆ. ನಾನೂ ಕೂಡ ಅನೇಕ ಬಾರಿ ನಮ್ಮ ಮೆಟ್ರೋದಲ್ಲಿ ಓಡಾಡಿದ್ದು, ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯನ್ನು ಒದಗಿಸುತ್ತಿದೆ.
— DK Shivakumar (@DKShivakumar) June 6, 2023
ರಾತ್ರಿ 11 ಗಂಟೆ ನಂತರವೂ ಸೇವೆಯನ್ನು ವಿಸ್ತರಿಸಬೇಕೆನ್ನುವ… pic.twitter.com/bqmjiNCXff
2ನೇ ಹಂತದ ಯೋಜನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರು ಒಪ್ಪಿಗೆ ನೀಡಬೇಕಿದೆ. 3ಎ ಹಂತದ ಯೋಜನೆಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಸಮೀಕ್ಷೆ ನಡೆಯುತ್ತಿದೆ. ಮುಂದೆ ಇದನ್ನು ಎಲ್ಲೆಲ್ಲಿ ವಿಸ್ತರಣೆ ಮಾಡಬಹುದು ಎಂದು ಸಮೀಕ್ಷೆ ಮಾಡಲು ಸೂಚಿಸಿದ್ದೇನೆ.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಮಾರ್ಗ ಯಾವಾಗ ಪೂರ್ಣಗೊಳ್ಳಲಿದೆ ಎಂಬ ಪ್ರಶ್ನೆಗೆ, ‘ಬೈಯ್ಯಪ್ಪನಹಳ್ಳಿ ಕೆ.ಆರ್ ಪುರಂ ಮೆಟ್ರೋ ಜುಲೈ ವೇಳೆಗೆ, ಕೆಂಗೇರಿ ಹಾಗೂ ಚಲಘಟ್ಟ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ, ನಾಗಸಂದ್ರ ಹಾಗೂ ಮಾದವಾರ ಸೆಪ್ಟೆಂಬರ್, ಅಕ್ಟೋಬರ್ ವೇಳೆಗೆ ಸಿದ್ಧವಾಗಬಹುದು. ಇನ್ನು ನೂತನ ಮಾರ್ಗ ಬೊಮ್ಮಸಂದ್ರದಿಂದ ಆರ್.ವಿ ರಸ್ತೆ ಮಾರ್ಗ ಅಕ್ಟೋಬರ್ ನವೆಂಬರ್ ವೇಳೆಗೆ ಆಗಲಿದೆ. ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಮಾರ್ಗ 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂವರೆಗಿನ ಮಾರ್ಗ ಕೂಡ ಇದೇ ಸಮಯದಲ್ಲಿ ಪೂರ್ಣಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.
ಮೂರನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಕೇಳಿದಾಗ, ‘ಕೇಂದ್ರ ಸರ್ಕಾರ ಇನ್ನು ಅನುಮತಿ ನೀಡಬೇಕಿದೆ. ಕೆಲವು ದಾಖಲೆಗಳನ್ನು ಕೇಳಿದ್ದು, ಅವುಗಳನ್ನು ಒದಗಿಸಲಾಗಿದೆ. ನಾನು ದೆಹಲಿಗೆ ಹೋಗಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ’ ಎಂದು ತಿಳಿಸಿದರು.
ಮೆಟ್ರೋ ಕಾಮಗಾರಿ ವಿಳಂಬ ಆರೋಪದ ಬಗ್ಗೆ ಕೇಳಿದಾಗ, ‘ಇಂದಿನ ಚರ್ಚೆಯಲ್ಲಿ ಅಧಿಕಾರಿಗಳು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ರಾತ್ರಿ ವೇಳೆ ಈ ಕಾಮಗಾರಿಗಳು ನಡೆಯುತ್ತಿವೆ. ಹಗಲಲ್ಲಿ ಸಿಮೆಂಟ್, ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸರ ಜತೆ ಸಭೆ ಮಾಡಬೇಕು. ಅದನ್ನು ಮಾಡುತ್ತೇನೆ. ಈ ವಿಚಾರದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ತಿಳಿಸಿದರು.
ನಮ್ಮ ಮೆಟ್ರೋದ ಮುಂದಿನ ಯೋಜನೆಗಳು ಮುಗಿಯಲಿರುವ ಸಮಯ ಹೀಗಿದೆ.
● ಬಯ್ಯಪ್ಪನಹಳ್ಳಿ- ಕೆಆರ್ಪುರಂ: ಜುಲೈ
● ಕೆಂಗೇರಿ- ಚಲ್ಲಘಟ್ಟ: ಆಗಸ್ಟ್ ಅಥವಾ ಸೆಪ್ಟೆಂಬರ್
● ನಾಗಸಂದ್ರ- ಮಾದಾವರ: ಸೆಪ್ಟೆಂಬರ್ ಅಥವಾ ಅಕ್ಟೋಬರ್
● ಬೊಮ್ಮಸಂದ್ರ – ಆರ್ವಿ ರಸ್ತೆ: ಅಕ್ಟೋಬರ್ ಅಥವಾ ನವೆಂಬರ್
● ಸೆಂಟ್ರಲ್ ಸಿಲ್ಕ್ ಬೋರ್ಡ್- ಕೆಆರ್ ಪುರಂ: 2026 ಜೂನ್
● ಏರ್ಪೋರ್ಟ್ ಲೈನ್: 2026 ಜೂನ್