Plastic ban in all Karnataka temples: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ನಿಷೇಧ – ನಿಯಮ ಉಲ್ಲಂಘನೆಗೆ ದಂಡ, ಕ್ರಿಮಿನಲ್ ಪ್ರಕರಣ
ಬೆಂಗಳೂರು: ಕರ್ನಾಟಕ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ರಾಜ್ಯಾಡಳಿತದ ದೇವಸ್ಥಾನಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ ಜಾರಿಗೆ ಬರುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ದೇವಸ್ಥಾನಗಳ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಹಾಗೂ ಪರಿಸರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಆಗಸ್ಟ್ 15ರಿಂದ ನಿಷೇಧ ಜಾರಿಗೆ ಬರುವ ಬಳಿಕ, ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆಯಾದರೆ ದಂಡ ವಿಧಿಸಲಾಗುವುದು. ಸಂಬಂಧಿತ ದೇವಾಲಯದ ಅಧಿಕಾರಿಗಳಿಗೆ ಉಲ್ಲಂಘನೆ ಕಂಡುಬಂದಲ್ಲಿ ದಂಡದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ.
“ಈ ಕ್ರಮವು ಧಾರ್ಮಿಕ ಸ್ಥಳಗಳ ಪವಿತ್ರತೆಯನ್ನು ಕಾಪಾಡುವುದರ ಜೊತೆಗೆ ಪರಿಸರ ಜವಾಬ್ದಾರಿಯನ್ನು ಉತ್ತೇಜಿಸುವ ಸರ್ಕಾರದ ಪ್ರಯತ್ನದ ಭಾಗವಾಗಿದೆ,” ಎಂದು ರಾಮಲಿಂಗಾರೆಡ್ಡಿ ಹೇಳಿದರು.
