
ಮೈಸೂರು:
ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.
ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ: ದಸಾರ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.
ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.