ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಜು.18ರವರೆಗೆ ವಿಸ್ತರಿಸಿ ನಗರದ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.
ಈ ಪ್ರಕರಣದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಜು.4ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಗುರುವಾರ ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಗಿತ್ತು.
ಸರಕಾರ ಪರ ವಕೀಲರು ನ್ಯಾಯಾಂಗ ಅವಧಿಯನ್ನು ಮುಂದುವರೆಸಬೇಕೆಂದು ರಿಮ್ಯಾಂಡ್ ಅರ್ಜಿ ಸಲ್ಲಿಸಿದರು. ಇದೇ ವೇಳೆ ನಟ ದರ್ಶನ್, ಪವಿತ್ರಾಗೌಡ ಪರ ವಕೀಲರು ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು ಮುಂದುವರೆಸಿ ಆದೇಶ ನೀಡಿದೆ.
ಆರೋಪಿಗಳ ಪರ ವಕೀಲ ರಂಗನಾಥ್ ರೆಡ್ಡಿ ಅವರು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ನ್ಯಾಯಾಲಯ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಿದೆ. ಸರಕಾರಿ ಪರ ವಕೀಲರು ಇಲ್ಲಿಯವರೆಗೂ ನಡೆದ ತನಿಖೆಯ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದಾರೆ ಎಂದರು.
ನಾವು 17ನೇ ಆರೋಪಿ ನಿಖಿಲ್ ನಾಯಕ್ಗೂ ಜಾಮೀನು ಅರ್ಜಿ ಸಲ್ಲಿಸಿದ್ದೇವೆ. ಎಂಟನೇ ಆರೋಪಿ, ಆರನೇ ಆರೋಪಿ ಬಳಸಿರುವ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆಗೆ ವಾಹನಗಳ ಅವಶ್ಯಕತೆಯಿಲ್ಲ. ವಾಹನಗಳು ಠಾಣೆಯ ಬಳಿಯೇ ನಿಂತರೆ ಕೆಟ್ಟು ಹೋಗುತ್ತದೆ. ಹೀಗಾಗಿ ವಾಹನಗಳ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದು ಜುಲೈ 10ರಂದು ವಿಚಾರಣೆ ನಡೆಯಲಿದೆ ಎಂದು ವಕೀಲ ರಂಗನಾಥ್ ರೆಡ್ಡಿ ತಿಳಿಸಿದರು.