ಬೆಂಗಳೂರು: ಪೂರ್ವ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 73 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಟವಲ್ನಿಂದ ಕತ್ತು ಹಿಸುಕಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ ವರದಿಯಾಗಿದೆ. ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಂಧ್ಯಾ ಶ್ರೀ (63) ಎಂಬ ಪತ್ನಿಯನ್ನು ಮನೆಯೊಳಗೆ ಟವಲ್ನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿರುವುದಾಗಿ ಆರೋಪಿಸಲಾಗಿದೆ. ಘಟನೆ ಬಳಿಕ ಆರೋಪಿ ಸ್ಥಳದಲ್ಲೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಚಯಸ್ಥರಿಂದ ಮಾಹಿತಿ ಸಿಕ್ಕ ಬಳಿಕ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ರಾವ್ ಅವರನ್ನು ವಶಕ್ಕೆ ತೆಗೆದುಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ವೈಟ್ಫೀಲ್ಡ್ ಉಪ ಪೊಲೀಸ್ ಆಯುಕ್ತ ಸೈದುಲು ಅಡವತ್ ಅವರು, ಘಟನೆಯ ನಂತರ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದಾಗಿ ಹೇಳಿರುವುದಾಗಿ ತಿಳಿಸಿದ್ದಾರೆ. ಅಮೆರಿಕದಲ್ಲಿ ವಾಸಿಸುವ ದಂಪತಿಯ ಮಗಳಿಗೆ ಘಟನೆಯ ಕುರಿತು ಮಾಹಿತಿ ನೀಡಲಾಗಿದೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
