ಬೆಳಗಾವಿ:
‘ಸ್ವಚ್ಛ ಭಾರತ ಮಿಷನ್-1.0 ಯೋಜನೆಗೆ 854 ಕೋಟಿ. ರೂ ಹಾಗೂ ಸ್ವಚ್ಛ ಭಾರತ ಮಿಷನ್-2.0 ಯೋಜನೆಗೆ 2,058 ಕೋಟಿ ರೂ. ಸೇರಿ ಒಟ್ಟು ರೂ.2,912 ಕೋಟಿ ರೂ.ಅನುದಾನವನ್ನು ಯೋಜನೆ ಅನುಷ್ಠಾನಕ್ಕೆ ಮೀಸಲಿರಿಸಲಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್. ತಿಳಿಸಿದ್ದಾರೆ.
ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಜ್ಯೋತಿ ಗಣೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎಲ್ಲ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಚ್ಛ ಭಾರತ್ ಮಿಷನ್ (Swachh Bharat Mission or Clean India Mission) ಅನುಷ್ಠಾನ ಮಾಡಲು ಪ್ರತ್ಯೇಕ ಐಎಎಸ್ ಅಧಿಕಾರಿ ನೇಮಿಸಲಾಗಿದೆ. ಎಲ್ಲ ಮಹಾನಗರ ಪಾಲಿಕೆಗಳಲ್ಲಿ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ, ಸಾಗಣಿಕೆ, ಸಂಸ್ಕರಣೆ ಮತ್ತು ವಿಲೇವಾರಿಗೆ ಅಗತ್ಯವಿರುವ ಯಂತ್ರೊಪಕರಣಗಳನ್ನು ಮತ್ತು ಸಿವಿಲ್ ಕಾಮಗಾರಿಗೆ ಕೈಗೊಳ್ಳಲು ವಿಸ್ತೃತ ಯೋಜನೆಗೆ ಅನುಮತಿ ನೀಡಿದ್ದು, 370ಕೊಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
‘ಹುಬ್ಬಳ್ಳಿ-ಧಾರವಾಡದಲ್ಲಿ 450 ಟಿಪಿಡಿ ಹಾಗೂ ತುಮಕೂರು ನಗರದಲ್ಲಿ 140 ಟಿಪಿಡಿ ಸಾಮಾಥ್ರ್ಯದ ತ್ಯಾಜ್ಯ ಸಂಸ್ಕರಣೆ ಸೌಲಭ್ಯ ಕಲ್ಪಿಸಲಾಗಿದೆ. ಈಗಾಗಲೇ ಬಹಳ ವರ್ಷಗಳಿಂದ ಶೇಖರಣೆಯಾಗಿರುವ ಹಳೆಯ ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸಲು ಬಯೋ ಮೈನಿಂಗ್ ಹಾಗೂ ಬಯೋ ರೆಮಡೇಷನ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕರ ಕೊರತೆಯಿಲ್ಲ. ನೇರ ಪಾವತಿಯಡಿ 958, ಹೊರಗುತ್ತಿಗೆ ಅಡಿ 774 ಹಾಗೂ 388 ಖಾಯಂ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ಶುಕ್ರವಾರದ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಅಬ್ಬಯ್ಯ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮ 2011ರ ಪ್ರಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 1470 ಪೌರ ಕಾರ್ಮಿಕರ ಹುದ್ದೆಗಳು ಇವೆ. ಸದ್ಯ 700 ಜನಸಂಖ್ಯೆಗೆ ಒಬ್ಬ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಒಟ್ಟು 134 ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.