ಜುಲೈ 18ರವರೆಗೆ ಮತ್ತೆ ಸೂರಜ್ ರೇವಣ್ಣನಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು ಪೊಲೀಸರು ಕೋರ್ಟ್ʼಗೆ ಒಪ್ಪಿಸಿದ್ದರು ಈ ಹಿನ್ನೆಲೆಯಲ್ಲಿ ಜುಲೈ 18 ರ ವರೆಗೂ ಮತ್ತೆ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದರು.
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗ ಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯದಿಂದ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದ ಮೇಲೂ ಗಾಯವಾಗಿದೆ ಎಂದು ದೂರುದಾರ ಆರೋಪಿಸಿದ್ದರು.
