ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಹಾಗೂ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ಹಂಚಿಕೊಂಡಿರುವ ಸುರ್ಜೇವಾಲ, ಡಿ.ಕೆ. ಶಿವಕುಮಾರ್ ಅವರನ್ನು ನಿಜವಾದ ಹೋರಾಟಗಾರ, ಕಾಂಗ್ರೆಸ್ ಸಿದ್ಧಾಂತಗಳಿಗೆ ಬದ್ಧನಾದ ಕಾರ್ಯಕರ್ತ ಹಾಗೂ ಅತ್ಯುತ್ತಮ ಸಂಘಟಕ ಎಂದು ಬಣ್ಣಿಸಿದ್ದಾರೆ.
“ಕಾಂಗ್ರೆಸ್ ಸಿದ್ಧಾಂತ ರಕ್ತದಲ್ಲೇ ಹರಿಯುವ ನಾಯಕ, ಏಳು ಕೋಟಿ ಕನ್ನಡಿಗರ ಮೇಲಿನ ಅಪಾರ ಪ್ರೀತಿ ಮತ್ತು ಕಾಳಜಿ ಹೊಂದಿರುವ ವ್ಯಕ್ತಿ. ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮತ್ತು ವೈಭವದ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಕನಸು ಹೊಂದಿರುವ ನಾಯಕ” ಎಂದು ಅವರು ಪ್ರಶಂಸಿಸಿದ್ದಾರೆ.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಧನ್ಯವಾದ ಸಲ್ಲಿಸಿರುವ ಸುರ್ಜೇವಾಲ, ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಕೊಂಡಾಡಿದ್ದಾರೆ.
“ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಎಂಟು ವರ್ಷಗಳ ಆಡಳಿತ ಸಾಮಾಜಿಕ ನ್ಯಾಯ, ದೂರದೃಷ್ಟಿಯ ನಾಯಕತ್ವ ಹಾಗೂ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಸಮತೋಲನದಿಂದ ಕೂಡಿದ ಸ್ಮರಣೀಯ ಅವಧಿಯಾಗಿ ಉಳಿಯಲಿದೆ” ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ತಮ್ಮ ಪಾಲಿಗೆ ಗೌರವದ ವಿಷಯ ಎಂದು ಹೇಳಿರುವ ಅವರು, ಕಾಂಗ್ರೆಸ್ನ ‘ಅಭಿವೃದ್ಧಿಯೊಂದಿಗೆ ಕಲ್ಯಾಣ’ ಎಂಬ ಸಿದ್ಧಾಂತವನ್ನು ಸರ್ಕಾರದ ನೀತಿಗಳಾಗಿ ರೂಪಿಸುವ ಕಾರ್ಯದಲ್ಲಿ, ವಿಶೇಷವಾಗಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದಾಗಿ ತಿಳಿಸಿದ್ದಾರೆ.
ರಾಜ್ಯದ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿರುವ ಸುರ್ಜೇವಾಲ, ನಾಯಕತ್ವ ಬದಲಾವಣೆಯ ಸಂದರ್ಭದಲ್ಲೂ ಕಾಂಗ್ರೆಸ್ ಏಕತೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.
“ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಏಕೈಕ ಗ್ಯಾರಂಟಿ ಎಂಬುದನ್ನು ನಮ್ಮ ಶಾಸಕರು, ಸಚಿವರು, ಕಾರ್ಯಕರ್ತರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಅಭಿವೃದ್ಧಿ, ಜನರ ಕಲ್ಯಾಣ, ಶಾಂತಿ, ಪ್ರಗತಿ ಹಾಗೂ ಸಹೋದರತ್ವಕ್ಕಾಗಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.
“ನಾವು ಒಗ್ಗಟ್ಟಾಗಿ ನಿಂತಿದ್ದೇವೆ… ಕರ್ನಾಟಕದ ಅಭಿವೃದ್ಧಿಗಾಗಿ, ಕರ್ನಾಟಕದ ಜನರಿಗಾಗಿ, ಶಾಂತಿ, ಪ್ರಗತಿ ಮತ್ತು ಸಹೋದರತ್ವಕ್ಕಾಗಿ. ಮುಂದೆಯೂ ಇದೇ ರೀತಿ ಒಗ್ಗಟ್ಟಾಗಿ ನಿಲ್ಲುತ್ತೇವೆ” ಎಂದು ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
