Gadag Murder | ನಾಲ್ವರ ಭೀಕರ ಹತ್ಯೆ ಕೇಸ್: ಸ್ವತಃ ಮಗನಿಂದಲೇ ಕುಟುಂಬ ಮುಗಿಸಲು ಸುಪಾರಿ
ಗದಗ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣ ಸಂಬಂಧ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿ ಮಾರಾಟ ವಿಚಾರವಾಗಿ ಕಲಹ ಉಂಟಾಗಿ ಮನೆಯ ಮಗನೇ ಕೊಲೆಗೆ ಸುಪಾರಿ ನೀಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಏಪ್ರಿಲ್ 19ರಂದು ಬೆಳಗಿನ ಜಾವ ಗದಗ ನಗರದ ದಾಸರ ಗಲ್ಲಿಯಲ್ಲಿ ನಾಲ್ವರನ್ನು ಹತ್ಯೆಯಾಗಿತ್ತು.
ಪ್ರಕರಣದ ಬಗ್ಗೆ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಮೂರು ದಿನಗಳೊಳಗೆ ಗದಗ ಎಸ್ಪಿ ಬಿಎಸ್ ನೇಮಗೌಡ ನೇತೃತ್ವದ ತನಿಖಾ ತಂಡವು ಪ್ರಕರಣವನ್ನು ಭೇದಿಸಿದೆ. 8 ಜನರನ್ನು ಬಂಧಿಸಿ, ವಿಚಾರಣೆ ಮಾಡಲಾಗುತ್ತಿದೆ. ಪ್ರಕರಣದಲ್ಲಿ ಪ್ರಕಾಶ್ ಬಾಕಳೆ ಪುತ್ರ ವಿನಾಯಕ್ ಬಾಕಳೆ (31) ಪ್ರಮುಖ ಆರೋಪಿಯಾಗಿದ್ದು, ಕೊಲೆಗೆ ಸುಪಾರಿ ನೀಡಿದ್ದ. ಇನ್ನುಳಿದಂತೆ, ಗದಗ ನಗರದ ಫೈರೋಜ್ ಖಾಜಿ (29), ಗದಗನ ಜಿಶಾನ್ ಖಾಜಿ (24), ಮೀರಜ್ನ ಸಾಹಿಲ್ ಖಾಜಿ (19), ಸೋಹೆಲ್ ಖಾಜಿ (19), ಮೀರಜ್ ಮೂಲದ ಸುಲ್ತಾನ್ ಶೇಖ್ (23), ಮಹೇಶ್ ಸಾಳೋಂಕೆ (21) ಹಾಗೂ ವಾಹಿದ್ ಬೇಪಾರಿ (21) ಎಂಬುವರನ್ನು ಬಂಧಿಸಲಾಗಿದೆ ಎಂದು ಉತ್ತರ ವಲಯ ಐಜಿಪಿ ತಿಳಿಸಿದ್ದಾರೆ.
ಕೊಲೆ ಮಾಡಲೆಂದು ವಿನಾಯಕ್ ಬಾಕಳೆಯು ಆರೋಪಿ ಫೈರೋಜ್ ಖಾಜಿಗೆ 65 ಲಕ್ಷ ರೂಪಾಯಿಗೆ ಸುಪಾರಿ ಡೀಲ್ ಕೊಟ್ಟಿದ್ದ. ಮುಂಗಡವಾಗಿ ಎರಡು ಲಕ್ಷ ರೂಪಾಯಿ ನೀಡಿದ್ದ. ಇತ್ತೀಚೆಗೆ ತಂದೆ ಪ್ರಕಾಶ್ ಬಾಕಳೆ ಹಾಗೂ ಪುತ್ರನ ನಡುವೆ ವ್ಯವಹಾರಿಕವಾಗಿ ವೈಮನಸ್ಸು ಉಂಟಾಗಿತ್ತು. ಅಲ್ಲದೆ, ಮತ್ತೊಬ್ಬ ಮಗನ ಹೆಸರಲ್ಲಿ ಪ್ರಕಾಶ್ ಆಸ್ತಿ ಮಾಡಿದ್ದರು.
ಈ ನಡುವೆ ಕಳೆದ ಕೆಲ ತಿಂಗಳ ಹಿಂದೆ ಪ್ರಕಾಶ್ ಗಮನಕ್ಕೆ ತಾರದೆ ಕೆಲ ಆಸ್ತಿಯನ್ನು ವಿನಾಯಕ್ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ವಿನಾಯಕ್ ವರ್ತನೆಗೆ ಬೇಸತ್ತು ಪ್ರಕಾಶ್ ಬಾಕಳೆ ಜಗಳವಾಡಿದ್ದ. ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಕಾಶ್, ಹೆಂಡತಿ ಸುನಂದಾ, ಪುತ್ರ ಕಾರ್ತಿಕ್ನನ್ನ ಹತ್ಯೆ ಮಾಡಲು ವಿನಾಯಕ್ ಪ್ಲಾನ್ ಮಾಡಿದ್ದ ಎಂದು ಐಜಿಪಿ ಮಾಹಿತಿ ನೀಡಿದರು.
ಅದರಂತೆ, ಮೀರಜ್ ಮೂಲದ ಸಾಹಿಲ್ ಸೇರಿ ಐವರ ತಂಡಕ್ಕೆ ಕೊಲೆ ಮಾಡಲು ವಿನಾಯಕ್ ಬಾಕಳೆ ಸುಪಾರಿ ನೀಡಿದ್ದ. ಕೃತ್ಯ ನಡೆದು 72 ಗಂಟೆಯಲ್ಲೇ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೇಧಿಸಿದ್ದಕ್ಕೆ ಡಿಜಿ, ಐಜಿಪಿ ಅಲೋಕ್ ಮೋಹನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ್ದ ಸಿಬ್ಬಂದಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.
