ಅಜ್ಜಂಪುರ, ಬೀರೂರು ಹಾಗೂ ಚನ್ನರಾಯಪಟ್ಟಣದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ
ಬೆಂಗಳೂರು, ಮೇ 31: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ, ಬೀರೂರು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಹಲವು ಮಹತ್ವದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಹೆಚ್ಚುವರಿ ನಿಲುಗಡೆಯೊಂದಿಗೆ ಹಾಸನ–ಸೊಲ್ಲಾಪುರ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.
ಅಜ್ಜಂಪುರದಲ್ಲಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 138ರ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಜೊತೆಗೆ ಅಜ್ಜಂಪುರ ಹಾಗೂ ಬೀರೂರು ರೈಲು ನಿಲ್ದಾಣಗಳ ನಡುವೆ ಪಾದಚಾರಿ ಸುರಂಗ ಮಾರ್ಗ ನಿರ್ಮಾಣಕ್ಕೂ ಅಡಿಗಲ್ಲು ಹಾಕಿದರು.
ಅಜ್ಜಂಪುರದಲ್ಲಿನ ರಸ್ತೆ ಮೇಲ್ಸೇತುವೆ ಯೋಜನೆಗೆ ₹50.48 ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಈ ಕಾಮಗಾರಿ ಪೂರ್ಣಗೊಂಡ ಬಳಿಕ ಸಾರ್ವಜನಿಕರ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಣೆಯಾಗಲಿದೆ. ಅಜ್ಜಂಪುರ–ಬೀರೂರು ನಡುವಿನ ಪಾದಚಾರಿ ಸುರಂಗ ಮಾರ್ಗವನ್ನು ₹5.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಪಾದಚಾರಿಗಳಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ರೈಲು ಹಳಿಗಳ ಅಕ್ರಮ ದಾಟುವಿಕೆಯನ್ನು ತಡೆಯುವ ಉದ್ದೇಶ ಹೊಂದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅಜ್ಜಂಪುರ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು, ಶಿವನಿ ರೈಲು ನಿಲ್ದಾಣದಲ್ಲಿ ಹೊಸಪೇಟೆ–ಬೆಂಗಳೂರು ರೈಲಿಗೆ ನಿಲುಗಡೆ ಮಂಜೂರು ಮಾಡಿದಕ್ಕಾಗಿ ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಅಜ್ಜಂಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ರಯಾಣಿಕ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಮಾತನಾಡಿ, ಅಜ್ಜಂಪುರದ ರಸ್ತೆ ಮೇಲ್ಸೇತುವೆ ಕಾಮಗಾರಿ ಸ್ಥಳೀಯ ಜನರಿಗೆ ಬಹಳ ಪ್ರಯೋಜನಕಾರಿಯಾಗಲಿದ್ದು, ಸುರಕ್ಷತೆ ಹಾಗೂ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ಹೇಳಿದರು.
ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾರ್ವಜನಿಕರ ಬೇಡಿಕೆಯ ಆಧಾರದ ಮೇಲೆ ಅಜ್ಜಂಪುರ ಹಾಗೂ ಶಿವನಿ ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ರೈಲು ನಿಲುಗಡೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಕಳೆದ ವರ್ಷ ಚಿಕ್ಕಮಗಳೂರು–ತಿರುಪತಿ ರೈಲು ಸೇವೆಗೆ ಚಾಲನೆ ನೀಡಿದ್ದನ್ನು ಅವರು ಸ್ಮರಿಸಿದರು.
ಅಜ್ಜಂಪುರ–ಬೀರೂರು ಪಾದಚಾರಿ ಸುರಂಗ ಮಾರ್ಗದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಡೂರು ಶಾಸಕ ಕೆ.ಎಸ್. ಆನಂದ್ ಅವರು, ಉತ್ತರ ಕರ್ನಾಟಕದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರು ಕಡೂರು ರೈಲು ನಿಲ್ದಾಣವನ್ನು ಬಳಸುತ್ತಿರುವ ಹಿನ್ನೆಲೆ, ಅಲ್ಲಿ ಹೆಚ್ಚುವರಿ ಸೌಲಭ್ಯಗಳು ಹಾಗೂ ರೈಲು ನಿಲುಗಡೆಗಳನ್ನು ಕಲ್ಪಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಅಜ್ಜಂಪುರ ರೈಲು ನಿಲ್ದಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ಪ್ರಯಾಣಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಪ್ರಸಕ್ತ ವರ್ಷದಲ್ಲಿ 17 ಜೋಡಿ ರೈಲು ಸೇವೆಗಳನ್ನು ಶಾಶ್ವತಗೊಳಿಸಲಾಗಿದ್ದು, ಕೆಲವು ವರ್ಗಗಳ ಪ್ರಯಾಣ ದರವನ್ನು ಶೇ.30ರಷ್ಟು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು.
ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗಳನ್ನು ಆರಂಭಿಸಲಾಗುವುದು ಎಂದು ಘೋಷಿಸಿದ ಅವರು, ಕರ್ನಾಟಕದ 61 ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು ₹2,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬಳಿಕ ಚನ್ನರಾಯಪಟ್ಟಣ ರೈಲು ನಿಲ್ದಾಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ನಿಲುಗಡೆ ಒದಗಿಸಿರುವ ಹಿನ್ನೆಲೆಯಲ್ಲಿ ರೈಲಿಗೆ ಹಸಿರು ನಿಶಾನೆ ತೋರಿದರು. ಚನ್ನರಾಯಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರ ದೀರ್ಘಕಾಲದ ಬೇಡಿಕೆಯನ್ನು ಮನಗಂಡು ಈ ಹೆಚ್ಚುವರಿ ನಿಲುಗಡೆ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಸರ್ಕಾರ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದ ಸೋಮಣ್ಣ, ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ 13,800ಕ್ಕೂ ಹೆಚ್ಚು ಮಾನವರಹಿತ ರೈಲ್ವೆ ಕ್ರಾಸಿಂಗ್ಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.
ಹಾಸನ, ಅರಸೀಕೆರೆ ಹಾಗೂ ಸಕಲೇಶಪುರ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಹಾಸನ–ಸೊಲ್ಲಾಪುರ ಎಕ್ಸ್ಪ್ರೆಸ್ ರೈಲು ಸೇವೆ ಈ ಭಾಗದ ಜನರ ಸಂಚಾರ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ನೆರವಾಗಲಿದೆ ಎಂದು ಹೇಳಿದರು.
ಅಜ್ಜಂಪುರ ರಸ್ತೆ ಮೇಲ್ಸೇತುವೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕ ಡಿ.ಎಸ್. ಸುರೇಶ್, ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪಾದಚಾರಿ ಸುರಂಗ ಮಾರ್ಗ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಡೂರು ಶಾಸಕ ಕೆ.ಎಸ್. ಆನಂದ್, ಬೇಲೂರು ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಬೆಳ್ಳಿ ಪ್ರಕಾಶ್, ಮುದಿತ್ ಮಿತ್ತಲ್ ಹಾಗೂ ಇತರ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.
ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್ಪ್ರೆಸ್ ರೈಲಿನ ಹೆಚ್ಚುವರಿ ನಿಲುಗಡೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್, ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ, ಬೇಲೂರು ಶಾಸಕ ಎಚ್.ಕೆ. ಸುರೇಶ್ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
