ಬೆಂಗಳೂರು:
ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಮಾಜಿ ಪ್ರಧಾನಮಂತ್ರಿ ದೇವೇಗೌಡರನ್ನು ಇವತ್ತು ಭೇಟಿ ಮಾಡಿ ದೀಪಾವಳಿ ಶುಭಾಶಯ ಕೋರಿದ್ದೇನೆ. ಅವರ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದರು.
ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ತಂದೆಯವರಾದ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನೀನು ಕೂಡ ಯಶಸ್ವಿ ಆಗುವಂತೆ ಹರಸಿದ್ದಾಗಿ ತಿಳಿಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ, ಸಮಸ್ಯೆಗಳಿದ್ದರೆ ಬಗೆಹರಿಸಿಕೊಂಡು, ಯಾವುದೇ ಗೊಂದಲಕ್ಕೆ ಅವಕಾಶ ಮಾಡಿ ಕೊಡದೆ ಹೆಚ್ಚು ಸ್ಥಾನವನ್ನು ಗೆಲ್ಲಬೇಕು. ಇದು ದೇಶದ ಭವಿಷ್ಯ ನಿರ್ಮಾಣದ ಚುನಾವಣೆ. ಯುವಕರು ಹೆಚ್ಚು ಹೆಚ್ಚಾಗಿ ಮುಂದೆ ಬರಬೇಕೆಂದು ಆಶೀರ್ವಾದ ಮಾಡಿದ್ದಾರೆ ಎಂದು ವಿವರಿಸಿದರು.
ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’… pic.twitter.com/rdEv0vKpgp
— Vijayendra Yediyurappa (@BYVijayendra) November 13, 2023
ದೇವೇಗೌಡರ ಭೇಟಿಯಿಂದ ತುಂಬಾ ಸಂತೋಷವಾಗಿದೆ. ರಾಜ್ಯದ ಮತ್ತು ದೇಶದ ಆಗುಹೋಗುಗಳ ಬಗ್ಗೆ ಅವರ ಚಿಂತನೆಗಳು ಪ್ರೇರಕ ಮತ್ತು ದೊಡ್ಡ ಶಕ್ತಿಯನ್ನು ಕೊಡುತ್ತದೆ ಎಂದು ವಿಶ್ಲೇಷಿಸಿದರು. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಮತ್ತು ಯಡಿಯೂರಪ್ಪ ಅವರನ್ನು ನೆನಪಾಗುತ್ತದೆ. ಅದನ್ನು ಕೂಡ ಅವರು ನೆನಪು ಮಾಡಿಕೊಂಡರು ಎಂದು ತಿಳಿಸಿದರು.
ಪಕ್ಷದ ಹಿತದೃಷ್ಟಿಯಿಂದ ದೇವೇಗೌಡರ ಸಲಹೆ, ಕುಮಾರಸ್ವಾಮಿ ಅವರ ಸಲಹೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಶಾಸಕರಾದ ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಸಂದರ್ಭದಲ್ಲಿ ಇದ್ದರು.