ಕನಕಗಿರಿ (ಕೊಪ್ಪಳ):
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ ‘ಭ್ರಷ್ಟ ನೀತಿಗಳಿಂದ’ ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆಗಳು ಏರಿಕೆಯಾಗುವಂತೆ ಮಾಡಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಆಡಳಿತವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಗುತ್ತಿಗೆದಾರರ ಸಂಘವೇ ಸರ್ಕಾರಕ್ಕೆ ಈ ಹೆಸರು ನೀಡಿದೆಯೇ ಹೊರತು ಬೇರೆ ಯಾರು ಅಲ್ಲ ಎಂದರು.
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಭ್ರಷ್ಟ ಸರ್ಕಾರವು ಭ್ರಷ್ಟ ನೀತಿಗಳನ್ನು ರೂಪಿಸುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲ ಸಿಲಿಂಡರ್, ಅಕ್ಕಿ, ಬೇಳೆಕಾಳು, ಹಿಟ್ಟು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಹೇಳಿದರು.
LIVE: Smt. @priyankagandhi ji interacts with the public in Kanakagiri, Karnataka.https://t.co/eeHf5oegi3
— Karnataka Congress (@INCKarnataka) May 4, 2023
ಗುತ್ತಿಗೆದಾರರು ಸರ್ಕಾರಕ್ಕೆ ಲಂಚ ನೀಡಬೇಕಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನೇಮಕಾತಿ ಹಗರಣಗಳು ನಡೆದಿವೆ. ಬಿಜೆಪಿ ಶಾಸಕರೊಬ್ಬರ ಪುತ್ರನ ಮನೆಯಲ್ಲಿ ಎಂಟು ಕೋಟಿ ರೂಪಾಯಿಯೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಆಪಾದಿತ ನೇಮಕಾತಿ ಹಗರಣಗಳನ್ನು ಉಲ್ಲೇಖಿಸಿದ ಅವರು, ನೀವು (ಜನರು) ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಖರ್ಚು ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳಿಸುತ್ತೀರಿ. ಆದರೆ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಗರಣದಂತೆ, ಯಾರೋ ಶಾಸಕರು ಹಣ ಲೂಟಿ ಮಾಡುವುದು ಮತ್ತು ಅಭ್ಯರ್ಥಿಗಳ ನೇಮಕಾತಿ ಸ್ಥಗಿತಗೊಳಿಸಿರುವುದು ಸರ್ಕಾರಕ್ಕೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.