Woman killed in BMTC bus collision; Husband and child escaped with their lives | ಬಿಎಂಟಿಸಿ ಬಸ್ ಢಿಕ್ಕಿ ಮಹಿಳೆ ಸಾವು; ಪತಿ, ಮಗು ಪ್ರಾಣಾಪಾಯದಿಂದ ಪಾರು
ಬೆಂಗಳೂರು :
ಬಿಎಂಟಿಸಿ ಬಸ್ ಢಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಫ್ಲೈ ಓವರ್ ಮೇಲೆ ಬುಧವಾರ ನಡೆದಿದೆ.
ಮೃತ ಮಹಿಳೆಯನ್ನು ಸೀಮಾ(21) ಎಂದು ಗುರುತಿಸಲಾಗಿದೆ. ಆಕೆಯ ಪತಿ ಗುರುಮೂರ್ತಿ ಮತ್ತು ಎರಡೂವರೆ ವರ್ಷದ ಮಗು ಗಾನವಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು,ಮೂಲತಃ ವಿಜಯನಗರ ಜಿಲ್ಲೆ, ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳಾದ ಇವರು, ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು.
ಬಿಎಂಟಿಸಿ ಬಸ್ ಚಾಲಕನ ಅಜಾಗರೂಕ ಚಾಲನೆಯಿಂದ ಅಪಘಾತ ನಡೆದಿದೆ ಎಂದು ಆರೋಪಿಸಲಾಗಿದೆ. ದ್ವಿಚಕ್ರವಾಹನವೊಂದಕ್ಕೂ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಳಿಕ ಬಸ್ ಬಿಟ್ಟು ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ.
