ಹಾವೇರಿ: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಹಾವೇರಿಯಲ್ಲಿ ರಾಜ್ಯ ಸರ್ಕಾರವು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಬಸವರಾಜ್ ಶಿವಣ್ಣನವರ್ ಆಗಮಿಸಿದ್ದರು. ಈ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಕೂಡಲೇ ಹುಬ್ಬಳ್ಳಿ ವಿಹಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಎದೆ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಹುಬ್ಬಳ್ಳಿಗೆ ತೆರಳಿ ವಿಹಾನ್ ಖಾಸಗಿ ಆಸ್ಪತ್ರೆ ದಾಖಲಾಗಿದ್ದಾರೆ. ಚಿಕಿತ್ಸೆ ನೀಡಿರುವ ವೈದ್ಯರು ಹೃದಯದಲ್ಲಿ ಸಮಸ್ಯೆ ಇರುವುದನ್ನು ಗುರುತಿಸಿ, ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಶಾಸಕರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.
ವಿಚಾರ ತಿಳಿದ ಸಚಿವ ಶಿವಾನಂದ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಶಾಸಕರು ಹುಬ್ಬಳ್ಳಿಯ ಖಾಸಗಿ ಅಸ್ಪತ್ರೆಗೆ ತೆರಳಿ, ಬಸವರಾಜ್ ಶಿವಣ್ಣನವರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಶಿವಣ್ಣ ಅವರು ಈಗ ಸ್ಥಿರವಾಗಿದ್ದಾರೆ. ಯಾವುದೇ ಆತಂಕದ ಅವಶ್ಯಕತೆ ಇಲ್ಲ. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಿ ಜನಸೇವೆಗೆ ಮರಳುತ್ತಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
