ಬೆಂಗಳೂರು: ರಾಜ್ಯ ಸರ್ಕಾರವು 2025-26ರ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ. ಆರ್ಥಿಕ ಸಹಾಯವನ್ನು ಬಿಡುಗಡೆ ಮಾಡಿದೆ.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ಗೆ 50 ರೂ. ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.
ಕಳೆದ ನವೆಂಬರ್ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.
ಈ 100 ರೂ. ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಕ್ಕರೆ ಸಚಿವರು ಮಾಹಿತಿ ನೀಡಿದ್ದಾರೆ.
“ರಾಜ್ಯ ಸರ್ಕಾರ ಘೋಷಿಸಿದಂತೆ, 2025-26 ರ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ಗೆ 50 ರೂ.ಗಳಂತೆ ಆರ್ಥಿಕ ಸಹಾಯವಾಗಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ” ಎಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪ್ರತಿ ಟನ್ಗೆ 50 ರೂಪಾಯಿಯಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.
ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್ ಕಬ್ಬಿಗೆ 50 ರೂ. ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
