ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದರಿಂದ ಪ್ರತಿಪಕ್ಷಗಳಿಗೆ ತೀವ್ರ ಮುಖಭಂಗವಾಗಿದೆ.
ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರತಿಪಕ್ಷಗಳ ಸದಸ್ಯರಿಗೆ ಸಂಸತ್ತಿನ ಮಾತನಾಡಲು ಅವಕಾಶ ನೀಡಲಿಲ್ಲ ಮತ್ತು ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ಮಂಗಳವಾರ ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು, “ಸಂವಿಧಾನವನ್ನು ಉಳಿಸಲು ಮತ್ತು ಸದನದ ಗೌರವ ಕಾಪಾಡಲು” ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನಿರ್ಣಯ ಮಂಡಿಸಬೇಕಾಯಿತು ಎಂದು ಹೇಳಿದ್ದರು.
ಎರಡು ದಿನಗಳ ಕಾಲ ನಡೆದ ಚರ್ಚೆಯ ನಂತರ ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಘೋಷಣೆಗಳ ನಡುವೆ, ಸ್ಪೀಕರ್ ಸ್ಥಾನದಲ್ಲಿದ್ದ ಜಗದಾಂಬಿಕಾ ಪಾಲ್ ಅವರು ಇಂದು ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಿದರು.
ವಿಪಕ್ಷಗಳು ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಪಾಲ್ ಒತ್ತಾಯಿಸಿದರು. ಆದರೆ ಪ್ರತಿಭಟನೆಗಳು ಮುಂದುವರಿದಂತೆ, ಅವರು ಸದನದ ಮತವನ್ನು ಕೋರಿದರು ಮತ್ತು ನಿರ್ಣಯವನ್ನು ಧ್ವನಿ ಮತದಿಂದ ತಿರಸ್ಕರಿಸಲಾಯಿತು ಎಂದು ಘೋಷಿಸಿದರು. ನಂತರ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.
